ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡಲು ಸರಕಾರ ಬದ್ಧ: ಸಿಎಂ ಯಡಿಯೂರಪ್ಪ
ಯುವಜನೋತ್ಸವಕ್ಕೆ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು, ಡಿ.2: ಖೇಲೋ ಇಂಡಿಯಾ ಮತ್ತು ಫಿಟ್ ಇಂಡಿಯಾ ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಯುವಜನರ ಮತ್ತು ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲಾ ರೀತಿಯ ಬೆಂಬಲ ನೀಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶನಿವಾರ ಭಾರತ ಸರಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯವು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ವರ್ಚುವಲ್ ವೇದಿಕೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಯುವಜನೋತ್ಸವ ಕಾರ್ಯಕ್ರಮ ರಾಜ್ಯದ ಕಲೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ರಾಷ್ಟ್ರ ಮಟ್ಟದಲ್ಲಿ ಪಸರಿಸಲು ಯುವಜನರಿಗೆ ಉತ್ತಮ ವೇದಿಕೆಯಾಗಿದೆ. ಇದನ್ನು ಯುವಜನತೆ ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ರಾಜ್ಯದ ಮತ್ತು ಕನ್ನಡ ಭಾಷೆಯ ಕಂಪನ್ನು ರಾಷ್ಟ್ರ ಮಟ್ಟದಲ್ಲಿ ಎತ್ತಿಹಿಡಿಯಲಿ ಎಂದು ಅವರು ಆಶಿಸಿದ್ದಾರೆ.
ಸರಕಾರದ ಅಪರ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಾತನಾಡಿ, ಯುವ ಜನೋತ್ಸವ ಕಾರ್ಯಕ್ರಮವು ರಾಷ್ಟ್ರದ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವಂತಹದ್ದಾಗಿದೆ ವೈವಿಧ್ಯಮಯ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಭಾಷೆಗಳಲ್ಲಿನ ಶ್ರೀಮಂತಿಕೆಯನ್ನು ಯುವಜನರಿಗೆ ಪರಿಚಯಿಸಲು ಒಂದು ಉತ್ತಮ ಅವಕಾಶವಾಗಿದೆ ಎಂದರು.
ದೇಶದ ಮತ್ತು ರಾಜ್ಯದ ಅಭಿವೃದ್ಧಿಗೆ ಯುವಶಕ್ತಿಯ ಕೊಡುಗೆ ಅಗತ್ಯವಾಗಿದೆ. ಪ್ರಸ್ತುತ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸುಮಾರು 6,500 ಯುವಜನರು ಪಾಲ್ಗೊಂಡಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಜಿಲ್ಲೆಗಳಲ್ಲಿ ವಿಜೇತರಾದ ಸುಮಾರು ಒಂದು ಸಾವಿರ ಪ್ರತಿಭಾವಂತ ಯುವಜನರ ವಿಡಿಯೋ ರೆಕಾರ್ಡಿಂಗ್ಗಳನ್ನು ಪರಿಣಿತ ತೀರ್ಪುಗಾರರು ಮೌಲ್ಯಮಾಪನ ಮಾಡಿ ರಾಜ್ಯ ತಂಡವನ್ನು ಯವನಿಕಾ ಸಭಾಂಗಣದಲ್ಲಿ ಆಯ್ಕೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯವರಾದ ಗೋವಿಂದ ಕಾರಜೋಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಕೆ.ಶ್ರೀನಿವಾಸ್ ವಂದಿಸಿದರು







