ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚೆತ್ತುಕೊಳ್ಳಿ: ಪೊನ್ನುರಾಜ್

ಮಂಗಳೂರು, ಜ. 2: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ವ್ಯವಸ್ಥಿತ ವಾಗಿ ಪೂರೈಕೆ ಮಾಡಲು ಕಾರ್ಯಪ್ರವೃತ್ತರಾಗಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ. ಪೊನ್ನುರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಾಮಾನ್ಯವಾಗಿ ಉಂಟಾಗುತ್ತದೆ. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಪೊನ್ನುರಾಜ್ ತಿಳಿಸಿದರು.
ಮಂಗಳೂರು ನಗರ ವ್ಯಾಪ್ತಿಯಲ್ಲಿ 24/7 ಅವಧಿಯಲ್ಲಿ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಈಗಾಗಲೇ ಕೈಗೊಳ್ಳಲಾಗುತ್ತಿದ್ದು, ದಿನಪೂರ್ತಿ ನೀರನ್ನು ಒದಗಿಸಲು ನೀರಿನ ಲಭ್ಯತೆಯನ್ನು ಕ್ರೋಢಿಕರಿಸುವ ಕೆಲಸವಾದಾಗ ಮಾತ್ರ ಈ ಯೋಜನೆಯ ಲಾಭವನ್ನು ಸಾರ್ವಜ ನಿಕರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ 32,884 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದು 736 ಜನ ಮರಣ ಹೊಂದಿದ್ದಾರೆ. ನಗರದಲ್ಲೇ 18,819 ಪ್ರಕರಣಗಳಾಗಿ 381 ಜನ ಮರಣ ಹೊಂದಿದ್ದಾರೆ. ಕೇರಳ ರಾಜ್ಯದಿಂದ ವಿದೇಶದಿಂದ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚು ಜನರು ಬಂದು ಹೋಗುತ್ತಿರುವ ಹಿನ್ನೆಲೆಯಲ್ಲಿ ಕೊರೋನ ಎರಡನೇ ಅಲೆ ಉಂಟಾಗುವ ಸಾಧ್ಯತೆಗಳಿವೆ. ಅವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಅವರು ಕೋವಿಡ್ ಲಸಿಕೆಯನ್ನು ನೀಡಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ರಸ್ತೆ ಹೊರತಾಗಿ ಜನಸಾಮಾನ್ಯರಿಗೆ ಅವಶ್ಯವಿರುವ ಮೂಲ ಸೌಕರ್ಯ ಸೇರಿದಂತೆ ಮತ್ತಿತರ ಆಶೋತ್ತರಗಳ ಬಗ್ಗೆ ಮಾಹಿತಿ ಕಲೆಹಾಕಿ ಸರಕಾರದಿಂದ ಅವುಗಳಿಗೆ ಯಾವ ರೀತಿಯಲ್ಲಿ ಸ್ಪಂದಿಸಿ ಇಲ್ಲಿನ ಜನರು ವಲಸೆ ಹೋಗದಂತೆ ತಡೆಯಲು ಮುಂದಾಗಬೇಕು ಎಂದರು.
ನಗರದ ಹೊರ ವಲಯದಲ್ಲಿ ಇಳಿಜಾರು ಪ್ರದೇಶಗಳನ್ನು ಸಮತಟ್ಟು ಮಾಡಿ ಮನೆಗಳನ್ನು ಕಟ್ಟಲು ಮುಂದಾಗುತ್ತಿರುವುದು ಕಂಡು ಬರುತ್ತಿದೆ. ಆ ಭಾಗದಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯವಾಗಿ ನೀರಿನ ಕಾಲುವೆಗಳನ್ನು ಹಾಗೂ ಚರಂಡಿಗಳನ್ನು ಮಾಲಕರು ನಿರ್ಮಿಸುವಂತೆ ನೋಡಿಕೊಳ್ಳಲು ಜವಾಬ್ದಾರಿಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಗಬೇಕು ಎಂದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ಬೆಳೆ ಸಮೀಕ್ಷೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸೇರಿದಂತೆ ಇತರ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವರು ಸ್ಥಳೀಯವಾಗಿ ತರಕಾರಿ ಹಾಗೂ ಹಣ್ಣುಗಳನ್ನು ಬೆಳೆಯಲು ಪ್ರೋತ್ಸಾಹಿ ಸಬೇಕು. ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಬರುವಂತಹ ಬೆಳೆಗಳನ್ನು ಬೆಳೆಯಲು ರೈತರಿಗೆ ನೆರವಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪಾ, ಜಿಪಂ ಸಿಇಒ ಡಾ.ಆರ್. ಸೆಲ್ವಮಣಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಲಂ ಮತ್ತಿತರರು ಉಪಸ್ಥಿತರಿದ್ದರು.







