ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಶಂಕುಸ್ಥಾಪನೆ
''ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ''

ಬೀದರ್, ಜ.6: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜನವರಿ 6ರಂದು ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಇದು ಪೂರ್ವಜನ್ಮದ ಪುಣ್ಯ ಕಾರ್ಯ. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ.ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂ.ಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೆ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರವೆ ಆರಂಭಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕದ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದ ಅವರು, ಸಾಧನೆ ಮಾತನಾಡಬೇಕು. ಮಾತಾಡುವುದು ಸಾಧನೆಯಾಗಬಾರದು ಎನ್ನುವುದು ತಮ್ಮ ಮನೋಭಾವವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅಂತೆಯೇ ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.
ಅವರು, ಇವರು ಎನ್ನದೆ ಎಲ್ಲ ಸಮುದಾಯದ ಜನರು ಸೇರಿ ಚರ್ಚಿಸಿ ಚಿಂತನ ಮಂಥನ ನಡೆಸುತ್ತಿದ್ದ ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿಯಾಗಿದೆ. ಸಾಮಾಜಿಕ ಬದಲಾವಣೆ ತರುವಲ್ಲಿ ಅನುಭವ ಮಂಟಪದ ಪಾತ್ರವು ಅತೀ ಮಹತ್ವದ್ದಾಗಿದೆ. ಮನುಕುಲದ ಏಳ್ಗೆಗೆ ಇಡೀ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ. ಅಣ್ಣ ಬಸವಣ್ಣನವರು ಈ ಕಲ್ಯಾಣ ನಾಡಿನಿಂದ ಹೊರಹೊಮ್ಮಿದ ಈ ದೇಶ ಕಂಡ ಬಹುದೊಡ್ಡ ವಿಶ್ವಗುರು ಅನ್ನುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಗೋ.ರು.ಚ ಅವರಂತಹ ಇನ್ನೂ ಅನೇಕ ಹಿರಿಯ ಸಾಹಿತಿಗಳ ಸಲಹೆ ಪಡೆದು, ಈ ಭಾಗದ ಜನರ ಬೇಡಿಕೆಯಂತೆ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ, ಪ್ರತಿ ವರ್ಷ ಬಸವ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇಂತಹ ಒಳ್ಳೆಯ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಅನುಭವ ಮಂಟಪದ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ನನ್ನ ಬದುಕು ಪಾವನವಾಯ್ತು ಎಂದು ಹೇಳಲು ಹೆಮ್ಮೆ ಅನಿಸುತ್ತದೆ. ನಮ್ಮ ಜೀವನದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ ಎಂದರು.
ಪ್ರಧಾನಮಂತ್ರಿ ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದಂತೆ, ಇಡೀ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಅನುಭವ ಮಂಟಪ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಭೂಮಿ ಪೂಜೆ ನೆರವೇರಿಸಿದ್ದು ಕೂಡ ಒಂದು ಐತಿಹಾಸಿಕ ಪ್ರಯತ್ನ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಮಾತನಾಡಿ, ಈ ಶರಣ ಕಾಯಕ ಭೂಮಿಯಲ್ಲಿ 12ನೆ ಶತಮಾನದ ವೈಭವವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರು ಚಾಲನೆ ನೀಡಿದ್ದು, ಬೀದರ್ ಮತ್ತು ರಾಜ್ಯದ ಇತಿಹಾಸಿದ ಪುಟಗಳಲ್ಲಿ ದಾಖಲಾಗುವಂತದ್ದಾಗಿದೆ. ಶ್ರೀ ಚನ್ನಬಸವ ಪಟ್ಟದ್ದೇವರ ಸಂಕಲ್ಪ ಇಂದು ಕೂಡಿ ಬಂದಿದೆ. ಶ್ರೀ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಈ ಭಾಗದ ಎಲ್ಲ ಶ್ರೀಗಳ ಮತ್ತು ಜನರ ಆಶಯದಂತೆ ಕಾಮಗಾರಿ ಬೇಗ ಪೂರ್ಣವಾಗಲು ಶ್ರಮಿಸಲಾಗುವುದು ಎಂದರು.
ಶಾಸಕ ಈಶ್ವರ್ ಖಂಡ್ರೆ ಮಾತನಾಡಿ, ಇಂದು ಬಸವ ಅನುಯಾಯಿಗಳಿಗೆ ಸಂತೋಷದ ದಿನ. ಈ ಕಟ್ಟಡ ಬೇಗ ನಿರ್ಮಾಣವಾಗಬೇಕು. ಈ ಮೂಲಕ ಬಸವಕಲ್ಯಾಣದ ಕೀರ್ತಿ ವಿಶ್ವದೆಲ್ಲೆಡೆ ಹರಡಲಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ
ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ವಿಶೇಷ ಅಧಿಕಾರಿ ಡಾ.ಎಚ್.ಆರ್.ಮಹಾದೇವ್, ಅನುಭವ ಮಂಟಪದ ನಿರ್ಮಾಣಕ್ಕೆ ಸಂಬಂಧಿಸಿದ ತಜ್ಞರ ಸಮಿತಿಯ ಅಧ್ಯಕ್ಷ ಗೋ.ರು.ಚನ್ನಬಸಪ್ಪ, ಶಾಸಕ ಬಸವರಾಜ ಪಾಟೀಲ್ ಸೇಡಂ, ವಿವಿಧ ಸ್ವಾಮೀಜಿಗಳು, ಸಚಿವರು, ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿ.ಪಂ.ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







