ವರಿಷ್ಠರು ಸೂಚಿಸಿದರೆ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಕೊಪ್ಪಳ, ಜ. 9: ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದು, ಅವರಿಂದ ಸೂಚನೆ ಬಂದ ಬಳಿಕ ವಿಸ್ತರಣೆಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಸಂಪುಟ ವಿಸ್ತರಣೆ ಯಾವಾಗ ಆಗಬೇಕು, ಯಾರನ್ನು ಸಚಿವರನ್ನಾಗಿಸಬೇಕು ಎಲ್ಲವೂ ವರಿಷ್ಠರ ತೀರ್ಮಾನಕ್ಕೆ ಬಿಟ್ಟದ್ದು. ಪಕ್ಷದ ಹೈಕಮಾಂಡ್ ಹೇಳಿದಾಗ ಸಂಪುಟ ವಿಸ್ತರಿಸುತ್ತೇನೆ ಎಂದರು.
ಆರ್ಥಿಕ ಸ್ಥಿತಿ ಹದಗೆಟ್ಟಿದೆ: ರಾಜ್ಯದಲ್ಲಿ ಕೋವಿಡ್-19 ಸೋಂಕು, ನೆರೆ ಮತ್ತು ಬರ ಪರಿಸ್ಥಿತಿ ಕಾರಣದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹಣಕಾಸು ಸ್ಥಿತಿ ಸರಿಯಿಲ್ಲದ ಕಾರಣ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಹೋಗಲಿದ್ದು, ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಳ್ಳಲಿವೆ ಎಂದ ಅವರು, ವಂಚನೆ ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚಕ ಯುವರಾಜ್ಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಅವರ ಜತೆ ಭಾವಚಿತ್ರ ತೆಗೆಸಿಕೊಂಡಿದ್ದಾರೆಂಬ ಕಾರಣಕ್ಕೆ ಬಿಜೆಪಿ ಜತೆ ನಂಟಿದೆ. ನಾಯಕರ ಜತೆ ಬಾಂಧವ್ಯ ಇದೆ ಎಂದೆಲ್ಲಾ ಹೇಳುವುದು ಸರಿಯಲ್ಲ. ತನಿಖೆ ನಡೆದಿದೆ. ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಸಾರ್ವಜನಿಕ ಜೀವನದಲ್ಲಿ ಇರುವವರು ಎಲ್ಲರ ಜತೆಯಲ್ಲೂ ಭಾವಚಿತ್ರ ತೆಗೆಸಿಕೊಳ್ಳುತ್ತಾರೆ. ಹಾಗೆಂದು ಅವರ ಜತೆ ಅವರಿಗೆ ಬಾಂಧವ್ಯ, ವ್ಯಾವಹಾರಿಕ ಸಂಬಂಧ ಇದೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಯಡಿಯೂರಪ್ಪ ಇದೇ ವೇಳೆ ಸಮಜಾಯಿಷಿ ನೀಡಿದರು.







