ಅಲೆಮಾರಿ ಜನಾಂಗ ಸ್ವಾಭಿಮಾನಿಯಾಗಿ ಬದುಕಲಿ: ಶಾಸಕ ಡಾ.ಭರತ್ ಶೆಟ್ಟಿ
![ಅಲೆಮಾರಿ ಜನಾಂಗ ಸ್ವಾಭಿಮಾನಿಯಾಗಿ ಬದುಕಲಿ: ಶಾಸಕ ಡಾ.ಭರತ್ ಶೆಟ್ಟಿ ಅಲೆಮಾರಿ ಜನಾಂಗ ಸ್ವಾಭಿಮಾನಿಯಾಗಿ ಬದುಕಲಿ: ಶಾಸಕ ಡಾ.ಭರತ್ ಶೆಟ್ಟಿ](https://www.varthabharati.in/sites/default/files/images/articles/2021/01/11/274658-1610373960.jpg)
ಮಂಗಳೂರು, ಜ.11: ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರು ಸ್ವಾಭಿಮಾನಿಗಳಾಗಿ ಬದುಕಬೇಕು. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂದು ಉತ್ತರ ವಿಧಾನಸಭಾ ಶಾಸಕ ಡಾ.ಭರತ್ ಶೆಟ್ಟಿ ತಿಳಿಸಿದ್ದಾರೆ.
ತಾಲೂಕಿನ ಪಡುಪೆರಾರು ಗ್ರಾಪಂ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಮಾಹಿತಿ ಶಿಬಿರದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರಕಾರವು ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಅನೇಕ ಕಲ್ಯಾಣ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸದ್ಭಳಕೆ ಮಾಡಿಕೊಳ್ಳುವುದರೊಂದಿಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗಬೇಕು ಎಂದರು.
ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಮಾತನಾಡಿ, ಸರಕಾರದ ವತಿಯಿಂದ ಈ ಸಮುದಾಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಜಮೀನಿನ ಹಕ್ಕುಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಜನಾರ್ದನ ಗೌಡ ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಮಹಾಲಕ್ಷ್ಮೀ ಬೋಳಾರ್ ವಂದಿಸಿದರು. ರಾಧೇಶ್ ಕಾರ್ಯಕ್ರಮ ನಿರೂಪಿಸಿದರು.