ಜ.25: ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ
ಕೊಣಾಜೆ: ಇತ್ತೀಚಿನ ದಿನಗಳಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಸಮಾಜದ ಸಾಮರಸ್ಯವನ್ನು ಹಾಳು ಮಾಡುವಂತಹ ದುಷ್ಕ್ರತ್ಯಗಳನ್ನು ಮಾಡುತ್ತಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿರುತ್ತದೆ. ಇದಕ್ಕೆ ಉದಾಹರಣೆಯಾಗಿ ಕುತ್ತಾರು ಕೊರಗಜ್ಜ ದೇವಸ್ಥಾನ ಮತ್ತು ಕೊಣಾಜೆ ಗೋಪಾಲಕೃಷ್ಣ ಭಜನಾ ಮಂದಿರವನ್ನು ಮಲಿನಗೊಳಿಸುವಂತಹ ದುಷ್ಕ್ರತ್ಯ ಮಾಡಿರುವುದು ಹಾಗೂ ತೊಕ್ಕೊಟ್ಟು ಒಳಪೇಟೆ ಮಾಂಸದ ಅಂಗಡಿಗೆ ಬೆಂಕಿ ಹಚ್ಚಿರುವುದು ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಸಮಾಜದ ಸಾಮರಸ್ಯವನ್ನು ಹಾಳು ಮಾಡುವಂತಹ ಹುನ್ನಾರವಾಗಿದ್ದು ಇದು ಖಂಡನೀಯ ಕೃತ್ಯವಾಗಿರುತ್ತದೆ ಮತ್ತು ಇದು ರಾಜ್ಯ ಸರ್ಕಾರದ ವೈಫಲ್ಯದಿಂದಾಗಿ ನಡೆಯುತ್ತಾ ಬಂದಿರುತ್ತದೆ. ಈ ಘಟನೆಗಳನ್ನು ಖಂಡಿಸಿ ಶಾಸಕ ಯು ಟಿ ಖಾದರ್ ನೇತೃತ್ವದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜ.25ರಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ತೊಕ್ಕೊಟ್ಟು ಬಸ್ಸು ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿರುವುದು. ಶಾಂತಿಪ್ರಿಯ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.