‘ಹೈ-ಡೆನ್ಸಿಟಿ ಕಾರಿಡಾರ್' ಎಪ್ರಿಲ್ ಒಳಗೆ ಕಾಮಗಾರಿ ಆರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಂಗಳೂರು ಮಿಷನ್-2022 ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು, ಜ. 30: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ‘ಹೈ-ಡೆನ್ಸಿಟಿ ಕಾರಿಡಾರ್ ನಿರ್ಮಿಸುವ ನಿಟ್ಟಿನಲ್ಲಿ 190 ಕಿಮೀ ಉದ್ದದ 12 ಕಾಮಗಾರಿಗಳ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆಯನ್ನು 477ಕೋಟಿ ರೂ.ಮೊತ್ತದಲ್ಲಿ ಕೈಗೊಂಡಿದ್ದು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. 2021ರ ಎಪ್ರಿಲ್ ಒಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.
ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‘ಬೆಂಗಳೂರು ಮಿಷನ್-2022 ಬೆಂಗಳೂರಿಗೆ ನವಚೈತನ್ಯ' ಅಪೆಕ್ಸ್ ಮೇಲುಸ್ತುವಾರಿ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಸ್ಮಾರ್ಟ್ಸಿಟಿ ಯೋಜನೆಯಡಿ ನಗರದ ಹೃದಯ ಭಾಗದಲ್ಲಿರುವ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು 37 ರಸ್ತೆಗಳ ಅಭಿವೃದ್ಧಿ ಕೈಗೊಂಡಿದ್ದು, ತ್ವರಿತವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು.
ಈ ನಿಟ್ಟಿನಲ್ಲಿ 5 ರಸ್ತೆಗಳು ಪೂರ್ಣಗೊಂಡಿವೆ. ಒಟ್ಟಾರೆ 32 ರಸ್ತೆಗಳನ್ನು ಮೇ-2021ರೊಳಗೆ ಪೂರ್ಣಗೊಳಿಸಲು ಸೂಚಿಸಲಾಯಿತು. ಈ ಕಾಮಗಾರಿಗಳನ್ನು ನಡೆಸುವ ಸಂದರ್ಭದಲ್ಲಿ ಸುಸ್ಥಿತಿಯಲ್ಲಿರುವ ಪಾದಚಾರಿ ಮಾರ್ಗಗಳನ್ನು ಹಾಗೆಯೇ ಉಳಿಸಿಕೊಂಡು ರಸ್ತೆ ಅಭಿವೃದ್ಧಿ ಪಡಿಸಿ. ಅನಗತ್ಯವಾಗಿ ಹಣ ಪೋಲು ಮಾಡಬಾರದು ಎಂದು ಸೂಚಿಸಿದರು.
ಮೆಟ್ರೋ ಕಾಮಗಾರಿ: ಮೆಟ್ರೋ ರೈಲು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸರಕಾರ ಪಣ ತೊಟ್ಟಿದ್ದು, ಇದೇ ತಿಂಗಳ 14ರಂದು ಕನಕಪುರ ಮೆಟ್ರೋ ಲೈನ್ ಅನ್ನು ಲೋಕಾರ್ಪಣೆಗೊಳಿಸಲಾಗಿದೆ. ಮುಂದುವರೆದು 2021ರ ಜೂನ್ ಅಂತ್ಯದೊಳಗೆ ಕೆಂಗೇರಿ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ವೈಟ್ಫಿಲ್ಡ್ ಮಾರ್ಗ ಹಾಗೂ ಇಲೆಕ್ಟ್ರಾನಿಕ್ ಸಿಟಿ ಮಾರ್ಗಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ಇದಕ್ಕೆ ಇರುವ ತೊಡಕುಗಳನ್ನು ಶೀಘ್ರವೇ ನಿವಾರಣೆ ಮಾಡಬೇಕು ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಜಕಾಲುವೆ ಯೋಜನೆ: ವಿನೂತನ ರೀತಿಯಲ್ಲಿ ರಾಜಕಾಲುವೆ ಸುಂದರಗೊಳಿಸುವ ಯೋಜನೆಯನ್ನು ರೂಪಿಸಿದ್ದು, ಸುಮಾರು 11 ಕಿಮೀ ಉದ್ದದ ಕೆ-100 ರಾಜಕಾಲುವೆಯನ್ನು ಅಭಿವೃದ್ಧಿಗೊಳಿಸಲು ಈಗಾಗಲೇ ಟೆಂಡರ್ ಆಹ್ವಾನಿಸಲಾಗಿರುತ್ತದೆ. ಇದಕ್ಕೆ ಪೂರಕವಾಗಿ ರಾಜಕಾಲುವೆಯಲ್ಲಿ ಜಲಮಂಡಳಿಯ ತ್ಯಾಜ್ಯ ನೀರು ಹರಿಯುವ ಕೊಳವೆಗಳನ್ನು ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಫೆಬ್ರವರಿ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದರು.
ಕೆರೆಗಳ ಪುನಶ್ಚೇತನ: ನಗರದ ಕೆರೆಗಳನ್ನು ಉಳಿಸಲು ಮತ್ತು ಜೀವವೈವಿದ್ಯ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ 25 ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಕಾಮಗಾರಿಯನ್ನು ಕೈಗೊಂಡಿದ್ದು, ಹಂತಹಂತವಾಗಿ ಪೂರ್ಣಗೊಳಿಸಲಾಗುವುದು. ಇದರ ಜೊತೆಗೆ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಫೆಬ್ರವರಿ 2022ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.
ಬೃಹತ್ ವೃಕ್ಷೋದ್ಯಾನಗಳು: ಬೆಂಗಳೂರು ನಗರದ ಹಸಿರು ಸಿರಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಉದ್ಯಾನನಗರಿ ಎಂಬ ಹೆಗ್ಗಳಿಕೆಗೆ ಪೂರಕವಾಗುವಂತೆ ಬೃಹತ್ ವೃಕ್ಷೋದ್ಯಾನಗಳನ್ನು ನಿರ್ಮಿಸಲಾಗುತ್ತಿದೆ. ಎಪ್ರಿಲ್ ಅಂತ್ಯಕ್ಕೆ ತುರಹಳ್ಳಿ (400 ಎಕರೆ), ಮೇ ಅಂತ್ಯಕ್ಕೆ ಕಾಡುಗೋಡಿ (102 ಎಕರೆ) ಮತ್ತು ಜೂನ್ ಅಂತ್ಯಕ್ಕೆ ಮಾಚೋಹಳ್ಳಿ (98 ಎಕರೆ) ವೃಕ್ಷೋದ್ಯಾನಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಏಕೀಕೃತ ಡಿಜಿಟಲ್ ಪೋರ್ಟಲ್: ನಾಗರಿಕರ ಸೇವೆಗಳಾದ ಖಾತಾ, ಆಸ್ತಿ ತೆರಿಗೆ, ಜನನ ಮತ್ತು ಮರಣ ಪ್ರಮಾಣ ಪತ್ರ, ಉದ್ಯಮ ಪರವಾನಗಿ, ಕಟ್ಟಡ ನಕ್ಷೆ ಪರವಾನಗಿ ಇತ್ಯಾದಿ ಸೇವೆಗಳು ಈಗಾಗಲೇ ಲಭ್ಯವಿದ್ದು, ಈ ಎಲ್ಲ ಸೇವೆಗಳನ್ನು ಸರಳೀಕೃತಗೊಳಿಸಿ ಏಕೀಕೃತ ಡಿಜಿಟಲ್ ಪೆÇೀರ್ಟಲ್ ಅಡಿ ಒದಗಿಸಲು ಕ್ರಮವಹಿಸಿದ್ದು ಎಪ್ರಿಲ್ ಅಂತ್ಯಕ್ಕೆ ಲಭ್ಯವಾಗುವುದು ಎಂದು ಅವರು ಮಾಹಿತಿ ನೀಡಿದರು.
ಸ್ವಚ್ಛ ಬೆಂಗಳೂರು: ಎಕ್ಸ್ ಪೀರಿಯೆನ್ಸ್ ಬೆಂಗಳೂರು ಯೋಜನೆಯ ಅನುಷ್ಠಾನಕ್ಕೆ ಶೀಘ್ರವೇ ಬೆಂಗಳೂರು ಪರಿಸರ ಮತ್ತು ಪರಂಪರೆ ಟ್ರಸ್ಟ್ ಸ್ಥಾಪಿಸಬೇಕು. ನಗರದಲ್ಲಿ ಹೆಚ್ಚಿನ ಜನಸಂಖ್ಯೆಯಿಂದ ತ್ಯಾಜ್ಯ ನಿರ್ವಹಣೆ ಪ್ರಮುಖ ಸವಾಲಿನ ಅಂಶವಾಗಿದೆ. ಪ್ರತಿನಿತ್ಯ ನಗರದಲ್ಲಿ 4,500ಕ್ಕೂ ಅಧಿಕ ಮೆಟ್ರಿಕ್ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ವೈಜ್ಞಾನಿಕ ಮತ್ತು ಸಮರ್ಪಕ ಘನತ್ಯಾಜ್ಯ ನಿರ್ವಹಣೆಗಾಗಿ 15 ದಿನದೊಳಗೆ ಎಸ್ಪಿವಿ ಸ್ಥಾಪಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಡಾ.ಅಶ್ವತ್ಥ ನಾರಾಯಣ, ಸಚಿವರಾದ ಕೆ.ಗೋಪಾಲಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.







