ಭತ್ತ, ರಾಗಿ, ಬಿಳಿ ಜೋಳ ಖರೀದಿ: ಸಂಪುಟ ಉಪ ಸಮಿತಿ ಘಟನೋತ್ತರ ಅನುಮೋದನೆ

ಬೆಂಗಳೂರು, ಫೆ.10: 2020-21ನೆ ಸಾಲಿನ ಮುಂಗಾರು ಋತುವಿನಲ್ಲಿ 1.10 ಲಕ್ಷ ಮೆಟ್ರಿಕ್ ಟನ್ ಭತ್ತ, 3 ಲಕ್ಷ ಮೆಟ್ರಿಕ್ ಟನ್ ರಾಗಿ ಮತ್ತು 4000 ಮೆಟ್ರಿಕ್ ಟನ್ ಬಿಳಿಜೋಳ ಖರೀದಿಸಲು ಈ ಹಿಂದೆ ಕೇಂದ್ರ ಸರಕಾರ ಅನುಮತಿ ನೀಡಿತ್ತು. ಈ ಪ್ರಮಾಣವನ್ನು ಹೆಚ್ಚಿಸುವಂತೆ ಕೋರಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಅದರಂತೆ ಕೇಂದ್ರ ಸರಕಾರವು ರಾಜ್ಯದ ಈ ಸಾಲಿನಲ್ಲಿ ರೈತರಿಂದ 12.10 ಲಕ್ಷ ಮೆಟ್ರಿಕ್ ಟನ್ ಭತ್ತ, 4 ಲಕ್ಷ ಮೆಟ್ರಿಕ್ ಟನ್ ರಾಗಿ ಮತ್ತು 1 ಲಕ್ಷ ಮೆಟ್ರಿಕ್ ಟನ್ ಬಿಳಿಜೋಳವನ್ನು ಖರೀದಿಸಲು ಅನುಮತಿ ನೀಡಿದೆ. ಅದರಂತೆ ಖರೀದಿಗೆ ಆದೇಶವನ್ನು ಹೊರಡಿಸಲಾಗಿದ್ದು, ಈ ಪ್ರಕ್ರಿಯೆಗೆ ಸಚಿವ ಸಂಪುಟ ಉಪ ಸಮಿತಿಯು ಘಟನೋತ್ತರ ಅನುಮೋದನೆ ನೀಡಿದೆ.
ಬುಧವಾರ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ ‘ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆಗಳ ಸ್ಥಿರೀಕರಣಕ್ಕಾಗಿ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಪರಿಶೀಲಿಸಲು ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿ’ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಕೇಂದ್ರ ಸರಕಾರ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ ಭತ್ತ(ಸಾಮಾನ್ಯ)-1868 ರೂ., ಭತ್ತ(ಗ್ರೇಡ್-ಎ)1888 ರೂ., ಬಿಳಿಜೋಳ(ಹೈಬ್ರಿಡ್)-2620 ರೂ., ಬಿಳಿಜೋಳ(ಮಾಲ್ದಂಡಿ)-2640 ರೂ., ರಾಗಿ-3295 ರೂ., ತೊಗರಿ-6000 ರೂ., ಶೇಂಗಾ-5275 ರೂ. ಹಾಗೂ ಕಡಲೆ-5100 ರೂ.ದರ ನಿಗದಿಪಡಿಸಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಭತ್ತ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ, ಗರಿಷ್ಠ 75 ಕ್ವಿಂಟಾಲ್ ಖರೀದಿ ಪ್ರಮಾಣವನ್ನು ನಿಗದಿಪಡಿಸಲಾಗಿದ್ದನ್ನು ಸಡಿಲಿಸಿ ಪ್ರತಿ ಎಕರೆಗೆ 25 ಕ್ವಿಂಟಾಲ್ ಮಿತಿಯನ್ನು ಮುಂದುವರಿಸಲಾಗಿದೆ. ಗರಿಷ್ಠ ಮಿತಿಯನ್ನು ತೆಗೆದು ಹಾಕಲಾಗಿದೆ. ರಾಗಿ ಖರೀದಿಗೆ ಸಂಬಂಧಿಸಿದಂತೆ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಗರಿಷ್ಠ 50 ಕ್ವಿಂಟಾಲ್ ಖರೀದಿ ಪ್ರಮಾಣವನ್ನು ಸಡಿಲಿಸಿ ಪ್ರತಿ ಎಕರೆಗೆ 10 ಕ್ವಿಂಟಾಲ್ ಮಿತಿಯನ್ನು ಮುಂದುವರಿಸಲಾಗಿದೆ. ಗರಿಷ್ಠ ಮಿತಿಯನ್ನು ತೆಗೆದು ಹಾಕಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಬಿಳಿಜೋಳ ಪ್ರತಿ ಎಕರೆಗೆ 15 ಕ್ವಿಂಟಾಲ್ನಂತೆ ಗರಿಷ್ಠ 75 ಕ್ವಿಂಟಾಲ್ ಖರೀದಿ ಪ್ರಮಾಣವನ್ನು ನಿಗದಿಪಡಿಸಲಾಗಿದ್ದನ್ನು ಸಡಿಲಿಸಿ ಪ್ರತಿ ಎಕರೆಗೆ 15 ಕ್ವಿಂಟಾಲ್ ಮಿತಿಯನ್ನು ಮುಂದುವರಿಸಿ, ಗರಿಷ್ಠ ಮಿತಿಯನ್ನು ತೆಗೆದು ಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರಕಾರವು ಘೋಷಿಸಿರುವ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಗೆ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲಿಗೆ 6,000 ರೂ.ರಂತೆ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪ್ರತಿ ರೈತರಿಂದ ಪ್ರತಿ ಎಕೆರೆಗೆ 7.5 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಬೆಳಗಾವಿ ಮತ್ತು ಚಿತ್ರದುರ್ಗ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಗಳ ಶಿಫಾರಸ್ಸಿನ ಮೇರೆಗೆ ಆ ಜಿಲ್ಲೆಗಳಿಂದಲೂ ತೊಗರಿ ಖರೀದಿಗೆ ಅನುಮತಿಸಿ, ಸರಕಾರದಿಂದ ಕಳೆದ ಸಾಲಿನ ಡಿ.16 ಹಾಗೂ ಪ್ರಸಕ್ತ ಸಾಲಿನ ಫೆ.5ರಂದು ಸೇರ್ಪಡೆ ಆದೇಶ ಹೊರಡಿಸಿರುವುದಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಜ.7ರಂದು ಮಾಡಲಾದ ಸರಕಾರದ ಆದೇಶದನ್ವಯ ಖರೀದಿ ಪ್ರಕ್ರಿಯೆ ಪೂರ್ವಸಿದ್ಧತೆಗಾಗಿ ಆವರ್ತನಿಧಿಯಿಂದ 25 ಕೋಟಿ ರೂ.ಗಳನ್ನು ಮರುಪಾವತಿಸುವ ಷರತ್ತಿಗಳಿಗೊಳಪಟ್ಟು ಬಿಡುಗಡೆ ಮಾಡಲಾಗಿರುವುದನ್ನು ಸಭೆಯು ಪರಿಶೀಲಿಸಿ ಘಟನೋತ್ತರ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರಕಾರವು ಹಿಂಗಾರು ಹಂಗಾಮಿನಲ್ಲಿ ಕಡಲೆ ಉತ್ಪನ್ನವನ್ನು 5,100 ರೂ., ಪ್ರತಿ ಕ್ವಿಂಟಾಲಿಗೆ ಬೆಂಬಲ ಬೆಲೆಯಂತೆ ಪಿ.ಎಸ್.ಎಸ್. ಸ್ಕೀಮ್ನಡಿ ಒಟ್ಟು 1,67,000 ಮೆಟ್ರಿಕ್ ಟನ್ ಖರೀದಿಗೆ ಅನುಮತಿ ನೀಡಿದೆ. ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ಸದೃಢ PACS/VSSN/FPO/TAPCMS ಸಂಸ್ಥೆಗಳ ಮೂಲಕ ಖರೀದಿ ಕೇಂದ್ರಗಳನ್ನು ತೆರೆದು ಕೂಡಲೆ ಖರೀದಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ್ವಿದಳ ಧಾನ್ಯಗಳ ಅಭಿವೃದ್ದಿ ಮಂಡಳಿ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ. ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ರೈತರ ನೋಂದಣಿ ಕಾರ್ಯವನ್ನು ಫೆ.15 ರಿಂದ ಎ.29ರವರೆಗೆ ಹಾಗೂ ಖರೀದಿಯನ್ನು ಫೆ.15 ರಿಂದ ಮೇ 14ರವರೆಗೆ ಕೈಗೊಳ್ಳಲಾಗುವುದು. ರೈತ ನೋಂದಣಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಂಡುಬಂದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ಬಳಸಿಕೊಳ್ಳಲು ಕ್ರಮವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳದ ವತಿಯಿಂದ ಖರೀದಿಸಲಾದ ಶೇಂಗಾ ಉತ್ಪನ್ನಕ್ಕೆ ರೈತರಿಂದ ಹಣ ಪಾವತಿಸಲು ಅನುಕೂಲವಾಗುವಂತೆ 2 ಕೋಟಿ ರೂ.ಹಣವನ್ನು ಮರುಪಾವತಿಸುವ ಷರತ್ತಿಗೊಳಪಟ್ಟು ಆವರ್ತನಿಧಿಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಭಾಗವಹಿಸಿದ್ದರು.







