ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಕ್ಕೆ ತೆರೆ ಎಳೆದ ಸುರಭಿ ದ್ವಿವೇದಿ
ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿದ್ದೇನು ?

ರಕ್ಷಾ ರಾಮಯ್ಯ- ಸುರಭಿ ದ್ವಿವೇದಿ- ಮೊಹಮ್ಮದ್ ನಲಪಾಡ್
ಬೆಂಗಳೂರು, ಫೆ,16: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಎಸ್.ರಕ್ಷಾ ರಾಮಯ್ಯ ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಸುರಭಿ ದ್ವಿವೇದಿ ಸ್ಪಷ್ಟಪಡಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಈ ಕುರಿತು ತಲೆದೋರಿದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಅವರು, ಎಂ.ಎಸ್. ರಕ್ಷಾ ರಾಮಯ್ಯ ಅವರು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಗಳ ಕುರಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ನೂರಾರು ಕಾರ್ಯಕರ್ತರಿಂದ ಮಾಹಿತಿ ಕ್ರೋಢೀಕರಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಪಕ್ಷದ ಆಂತರಿಕ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ. ಬ್ಲಾಕ್ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿ ಸೋತವರು ನಮ್ಮವರೇ, ಗೆದ್ದವರೂ ನಮ್ಮವರೇ ಆಗಿದ್ದಾರೆ. ನಮ್ಮಲ್ಲಿನ ಗೊಂದಲಗಳನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಹಲವು ಬ್ಲಾಕ್ ಕಾಂಗ್ರೆಸ್ ಘಟಕದ ಪ್ರಮುಖರು ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ. ಸೋತವರಿಗೂ ಸಹ ಪಕ್ಷದ ವಿವಿಧ ಘಟಕಗಳಲ್ಲಿ ಅವಕಾಶ ಕಲ್ಪಿಸುತ್ತೇವೆ. ಯಾರಿಗೂ ಅನ್ಯಾಯವಾಗುವುದಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಚುನಾವಣೆ ನಡೆದ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಗೆದ್ದು ಸೋತ ಸುಮಾರು 45ಕ್ಕೂ ಹೆಚ್ಚು ಮಂದಿ ಪ್ರತ್ಯೇಕವಾಗಿ ಸುರಭಿ ದ್ವಿವೇದಿ ಅವರಿಗೆ ಇಂದು ದೂರು ಸಲ್ಲಿಸಿದರು.
ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ಕಾರ್ಯಕರ್ತರು, ಬ್ಲಾಕ್ ಘಟಕದ ಪದಾಧಿಕಾರಿಗಳ ಅಹವಾಲುಗಳನ್ನು ಶಾಂತಚಿತ್ತದಿಂದ ಆಲಿಸಿದ ಸುರಭಿ ದ್ವಿವೇದಿ, ಆದಷ್ಟು ಬೇಗ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಸಮಾಧಾನಪಡಿಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಅವರ ಜತೆ ಪ್ರತ್ಯೇಕವಾಗಿ ಮಾತನಾಡಿದ ಸುರಭಿ ದ್ವಿವೇದಿ ಅವರು, ಇದೇ ತಿಂಗಳ 20 ಮತ್ತು 21 ರಂದು ದಿಲ್ಲಿಗೆ ಬರುವಂತೆ ಸೂಚಿಸಿದರು.
ಭಾರೀ ಕುತೂಹಲ ಕೆರಳಿಸಿದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಇತ್ತೀಚೆಗೆ ಹೊರಬಿದ್ದ ಬಳಿಕ ಭಾರೀ ಗೊಂದಲ ಸೃಷ್ಟಿಯಾಗಿತ್ತು. ಚುನಾವಣೆಯಲ್ಲಿ ಎಂ.ಎಸ್.ರಕ್ಷಾ ರಾಮಯ್ಯ ಅವರು 57271 ಮತಗಳನ್ನು ಪಡೆದಿದ್ದರೆ, ಮುಹಮ್ಮದ್ ನಲಪಾಡ್ ಅವರು 64203 ಮತಗಳನ್ನು ಪಡೆದಿದ್ದರು. ನಲಪಾಡ್ ಅವರು ರಾಮಯ್ಯ ಅವರಿಗಿಂತ ಹೆಚ್ಚಿನ ಮತಗಳನ್ನು ಪಡೆದಿದ್ದರೂ ನಲಪಾಡ್ ಫಲಿತಾಂಶವನ್ನು ತಡೆ ಹಿಡಿಯಲಾಗಿತ್ತು. ಹೀಗಾಗಿ ರಕ್ಷಾ ರಾಮಯ್ಯ ಅವರು ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
.jpg)







