ಆದಿತ್ಯನಾಥರನ್ನು ಭೇಟಿ ಮಾಡಿದ ಸಚಿವ ಕೋಟ
ಅಯೋಧ್ಯೆಯಲ್ಲಿ ಕರ್ನಾಟಕದ ಯಾತ್ರಿನಿವಾಸ ನಿರ್ಮಾಣಕ್ಕೆ ಭೂಮಿ ಒದಗಿಸಲು ಮನವಿ

ಮಂಗಳೂರು, ಫೆ.21: ಕೇರಳದ ಕಾಸರಗೋಡಿಗೆ ಚುನಾವಣೆಯ ಪ್ರಚಾರ ನಿಮಿತ್ತ ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು, ಉತ್ತರಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರಕ್ಕೆ ಭವಿಷ್ಯದಲ್ಲಿ ಭೇಟಿ ನೀಡುವ ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿನಿವಾಸ ಒಂದನ್ನು ನಿರ್ಮಾಣ ಮಾಡಲು ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರು ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ಮನವಿ ಮಾಡಿಕೊಂಡರು.
ಉತ್ತರ ಪ್ರದೇಶದ ಸರ್ಕಾರ ಕರ್ನಾಟಕದ ಯಾತ್ರೆ ನಿವಾಸಕ್ಕಾಗಿ ಶೀಘ್ರದಲ್ಲಿ ಭೂಮಿಯ ಮಂಜೂರು ಮಾಡಿದರೆ ಯಾತ್ರಿನಿವಾಸ ನಿರ್ಮಾಣಕ್ಕೆ ಅನುಕೂಲ ಆಗುವುದಾಗಿ ಸಚಿವ ಕೋಟ ಆದಿತ್ಯನಾಥರಲ್ಲಿ ತಿಳಿಸಿದರು. ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಆದಿತ್ಯನಾಥರು, ಕೂಡಲೇ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಕರ್ನಾಟಕದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.








