ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಮ್ ಆದ್ಮಿ ಪಕ್ಷ ಆಗ್ರಹ
ಬೆಂಗಳೂರು, ಮಾ.2: ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಆಗ್ರಹಿಸಿದ್ದಾರೆ.
ಅಲ್ಲದೆ, ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ನಮ್ಮ ಕರ್ನಾಟಕದ ಘನತೆಗೆ ಕಪ್ಪು ಚುಕ್ಕೆ. ಈ ಕೂಡಲೇ ಶಾಸಕ ಸ್ಥಾನದಿಂದಲೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ? ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರಕಾರದ ಮೇಲೆ ಮಹಿಳೆಯರಿಗೆ ಕಿಂಚಿತ್ತೂ ನಂಬಿಕೆ ಇಲ್ಲ. ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕುಶಲಾ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ನೀವು ಈ ಕೂಡಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹಾಗೂ ಯುವತಿಯ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.







