ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ: ಸುರೇಶ್ ಕುಮಾರ್

ಬೆಂಗಳೂರು, ಮಾ.12: ಕೋವಿಡ್-19ರ ನಂತರದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಶೈಕ್ಷಣಿಕ ಸಾಲಿಗೆ ಸೀಮಿತಗೊಳಿಸಿ, 2017-18ನೆ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ವಿಭಾಗ, ವಿಷಯ, ಭಾಷೆ ಮತ್ತು ಸಂಯೋಜನೆಗಳನ್ನು ಅನುಮತಿಸುವ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ವಿನಾಯಿತಿಯನ್ನು ನೀಡಿ ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ, ನವೀಕರಣ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಸರಕಾರದ ಸ್ಪಷ್ಟೀಕರಣವನ್ನ ಬಿಡುಗಡೆ ಮಾಡಲಾಗಿದೆ. ಆರ್.ಟಿ.ಇ ಮರುಪಾವತಿ, ದಾಖಲಾತಿ/ಹಾಜರಾತಿಗಳನ್ನು ನೋಂದಣಿ, ನವೀಕರಣದ ನೆಪದಲ್ಲಿ ಅನವಶ್ಯಕ ಸಮಸ್ಯೆಗಳಿಗೆ ಕಾರಣವಾಗದಂತೆ ಕ್ರಮ ವಹಿಸಬೇಕೆಂದು ಇಲಾಖಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನನ್ವಯ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ಕುರಿತಂತೆ ಕಠಿಣ ಕ್ರಮಗಳನ್ನು ಅನುಸರಿಸಬೇಕಾಗಿರುವುದು ಸರಕಾರದ ಪ್ರಾಥಮಿಕ ಜವಾಬ್ದಾರಿಯಾಗಿದ್ದು, ಅಸ್ತಿತ್ವದಲ್ಲಿರುವ ಹಾಗೂ ಹೊಸ ಶಿಕ್ಷಣ ಸಂಸ್ಥೆಗಳಿಗೆ ವಿಶಿಷ್ಟ ನಿಯಮಗಳ ರಚನೆಗೆ ಈಗಾಗಲೇ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿಯನ್ನ ರಚಿಸಿ ಆದೇಶವನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಂದು ತಿಂಗಳ ಅವಧಿಯಲ್ಲಿ ಈ ಸಮಿತಿಯು ವಿದ್ಯಾರ್ಥಿ ಸಂವೇದಿತವಾದ ಶಾಲಾ ಸುರಕ್ಷತಾ ಕ್ರಮಗಳನ್ನು ಇಲ್ಲಿಯವರೆಗಿನ ಇಲಾಖಾ ದೇಶಗಳು, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಲಿದೆ. ಶಾಲೆಯ ಭೌತಿಕ ಸುರಕ್ಷತೆ, ಮೂಲಭೂತ ಸೌಕರ್ಯ, ವಿಪತ್ತು ನಿರ್ವಹಣೆ, ಆರೋಗ್ಯ, ಸಾರಿಗೆ, ತುರ್ತು ಸನ್ನದ್ದತೆ ಸೇರಿದಂತೆ ಎಲ್ಲ ಆಯಾಮಗಳನ್ನು ಈ ಸಮಿತಿಯು ಸಮಗ್ರವಾಗಿ ಅವಲೋಕಿಸಲಿದೆ. ಈ ಸಮಿತಿಯು ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ರಾಜಿ ಇಲ್ಲದ ರೀತಿಯಲ್ಲಿ ನಿಯಮಗಳನ್ನು ರೂಪಿಸಲಿದೆ ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.







