ಉಪ ಚುನಾವಣೆ: ಬೆಳಗಾವಿ ಕ್ಷೇತ್ರಕ್ಕೆ ಒಂದೇ ಹೆಸರು ಶಿಫಾರಸ್ಸು- ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ. 20: ಮುಂದಿನ ತಿಂಗಳು ನಡೆಯಲಿರುವ ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದಲ್ಲಿ ಕ್ರಮವಾಗಿ ಮಾ.29 ಮತ್ತು 30ರಂದು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಒಬ್ಬರೇ ಅಭ್ಯರ್ಥಿ ಹೆಸರು ಹೈಕಮಾಂಡ್ಗೆ ಶಿಫಾರಸ್ಸು ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಶನಿವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಕಾರ್ಯತಂತ್ರ ಕುರಿತು ನಡೆದ ಮುಖಂಡರ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಒಂದು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ನಾಯಕರಿಗೆ ಉಸ್ತುವಾರಿ ವಹಿಸಲಾಗುವುದು. ಸ್ಥಳೀಯ ನಾಯಕರ ಅಭಿಪ್ರಾಯದ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯದ ಹಿರಿಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ತೀರ್ಮಾನ ಮಾಡಲಾಗಿದೆ. ಹೆಚ್ಚು ಬಹಿರಂಗ ಸಭೆಗಳನ್ನು ಮಾಡದೆ, ಎರಡೆರಡು ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಕೊರೋನ ಮಾರ್ಗಸೂಚಿ ಇನ್ನೂ ಗೊಂದಲದಲ್ಲಿದೆ. 500 ಜನ ಸೇರಿಸಬೇಕು ಎಂದು ಸರಕಾರ ಹೇಳಿತ್ತು. ನಾವು ನಿನ್ನೆ, ಇವತ್ತು ಹಾಗೂ ನಾಳೆ ನಿಗದಿಯಾಗಿದ್ದ ಸಭೆಯನ್ನು ಕೊರೋನ ಎರಡನೇ ಅಲೆ ಮಾರ್ಗಸೂಚಿ ಹಿನ್ನೆಲೆಯಲ್ಲಿ ರದ್ದು ಮಾಡಿದ್ದೇವೆ. ಆಡಳಿತ ಪಕ್ಷ ಬಿಜೆಪಿ ಇಂದು ಸಭೆ ನಡೆಸುತ್ತಿದೆ. ರಾಜ್ಯ ಸರಕಾರವಂತೂ ಈ ಉಪಚುನಾವಣೆ ಹಾಗೂ ಕೋವಿಡ್ ಮಾರ್ಗಸೂಚಿ ವಿಚಾರದಲ್ಲಿ ಗೊಂದಲದಲ್ಲಿದೆ ಎಂದು ಶಿವಕುಮಾರ್ ಟೀಕಿಸಿದರು.
ಎರಡು ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಮಸ್ಕಿಯಲ್ಲಿ 29ಕ್ಕೆ, ಬಸವ ಕಲ್ಯಾಣದಲ್ಲಿ 30ಕ್ಕೆ ನಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾನು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಿರಿಯ ಮುಖಂಡರೆಲ್ಲರೂ ಅಲ್ಲಿಗೆ ಹೋಗುತ್ತಿದ್ದೇವೆ. ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಕೆ ವಿಚಾರದಲ್ಲಿ ಅಂತಿಮ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.
ಈ ಉಪಚುನಾವಣೆಗೆ ಎಲ್ಲರೂ ಉತ್ಸಾಹದಲ್ಲಿದ್ದು, ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಮತದಾರರ ಮೇಲೆ ಅಪಾರ ನಂಬಿಕೆ ಇಟ್ಟಿದ್ದೇವೆ. ಈ ರಾಜ್ಯದಲ್ಲಿ ಬದಲಾವಣೆ ಅಗತ್ಯವಿದೆ ಎಂದು ಮತದಾರ ತೀರ್ಮಾನಿಸಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಮನವಿ ಮಾಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾವು ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ಶಿವಕುಮಾರ್ ನುಡಿದರು.
ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ನಮ್ಮ ಸಮಿತಿ ಒಂದೇ ಹೆಸರು ಶಿಫಾರಸ್ಸು ಮಾಡಿದೆ. ನಮ್ಮ ಪಕ್ಷಕ್ಕೆ ಯಾರು ಸೂಕ್ತ ಅಭ್ಯರ್ಥಿ ಎಂದು ನಾವು ತೀರ್ಮಾನ ಮಾಡುತ್ತೇವೆಯೇ ಹೊರತು, ಬೇರೆಯವರು ಹೇಳಿದಂತೆ ಅಲ್ಲ ಎಂದ ಶಿವಕುಮಾರ್, ಪೆಟ್ರೋಲ್, ಡೀಸೆಲ್ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೇಂದ್ರ-ರಾಜ್ಯ ಸರಕಾರಗಳ ಆಡಳಿತ ವೈಫಲ್ಯಗಳನ್ನು ಉಪಚುನಾವಣೆಯಲ್ಲಿ ಪ್ರಚಾರ ಮಾಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖಂಡರಾದ ಎಸ್.ಆರ್.ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ್, ಸಲೀಂ ಅಹ್ಮದ್, ಮಧು ಯಕ್ಷಿಗೌಡ, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ. ದೇಶಪಾಂಡೆ, ಟಿ.ಬಿ.ಜಯಚಂದ್ರ, ಅಲ್ಲಂ ವೀರಭದ್ರಪ್ಪ, ದಿನೇಶ್ ಗುಂಡೂರಾವ್, ಝಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಹೆಸರಿನ ಜೊತೆಗೆ ಇನ್ನಿಬ್ಬರ ಹೆಸರನ್ನು ಹೈಕಮಾಂಡ್ಗೆ ರವಾನಿಸಲಾಗಿದೆ. ನನ್ನ ಇಷ್ಟದ ಪ್ರಶ್ನೆ ಇಲ್ಲಿ ಇಲ್ಲ. ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ವರಿಷ್ಟರನ್ನು ನಾನು ಭೇಟಿ ಮಾಡುತ್ತೇನೆ. ಪ್ರಕಾಶ್ ಹುಕ್ಕೇರಿ ಸಭೆಗೆ ಬಂದಿಲ್ಲ. ಆದರೆ, ಅವರ ಹೆಸರನ್ನು ದಿಲ್ಲಿಗೆ ರವಾನಿಸಲಾಗಿದೆ. ಯಾರಿಗೆ ಟಿಕೆಟ್ ನೀಡಿದರೂ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ'
-ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ







