ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ, ಮಾ.26: ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಬಾಂಗಣದಲ್ಲಿ, ಜಿಲ್ಲೆಯ ತಾಯಿ ಮತ್ತು ಮರಣ ಪ್ರಮಾಣ ನಿಯಂತ್ರಣ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ರಾಷ್ಟ್ರ ಮತ್ತು ರಾಜ್ಯದ ಸರಾಸರಿಯನ್ನು ಹೋಲಿಸಿದಾಗ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಇದೆ ಎಂದ ಅವರು, ಜಿಲ್ಲೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶಿಶು ಮರಣವು 1000ಕ್ಕೆ 2.9 ಇದೆ. ಇದು ರಾಜ್ಯದಲ್ಲಿ ಸರಾಸರಿ 25, ರಾಷ್ಟ್ರದ ಸರಾಸರಿ 29 ಇದೆ. ಪಕ್ಕದ ಕೇರಳ ರಾಜ್ಯದಲ್ಲಿ 10 ಇದೆ. ತಾಯಿ ಮರಣದ ಸಂಖ್ಯೆಯು ಜಿಲ್ಲೆಯಲ್ಲಿ 1 ಲಕ್ಷಕ್ಕೆ 85 ಇದ್ದರೆ, ಅದು ರಾಜ್ಯದಲ್ಲಿ ಸರಾಸರಿ 108, ದೇಶದಲ್ಲಿ 134 ಇದೆ. ನೆರೆ ರಾಜ್ಯ ಕೇರಳದಲ್ಲಿ 100 ಇದೆ ಎಂದರು.
ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಹೆರಿಗೆ ಮೊದಲು ಹಾಗೂ ನಂತರದ ದಿನಗಳಲ್ಲಿ ಉತ್ತಮ ಆರೋಗ್ಯ ಸೇವೆ ನೀಡಬೇಕು. ಆಗ ಮಾತ್ರ ತಾಯಿ ಮತ್ತು ಶಿಶು ಮರಣದ ಸಂಖ್ಯೆ ಕಡಿಮೆಯಾಗುತ್ತದೆ ಎಂದ ಅವರು ಗರ್ಭಿಣಿಯರಿಗೆ ತಪ್ಪದೇ ತಾಯಿ ಕಾರ್ಡ್ಗಳನ್ನು ಪ್ರತಿಯೊಬ್ಬರಿಗೂ ವಿತರಿಸುವುದರೊಂದಿಗೆ ಅವರುಗಳಿಗೆ ಉತ್ತಮ ಆರೋಗ್ಯದಿಂದಿರಲು ಸೂಕ್ತ ಸಲಹೆಗಳನ್ನು ನೀಡುವ ಜೊತೆಗೆ ಪೌಷ್ಟಿಕ ಆಹಾಗಳನ್ನು ಒದಗಿಸಬೇಕು ಎಂದರು.
ಸಾಮಾನ್ಯವಾಗಿ ರಕ್ತ ಹೀನತೆ, ರಕ್ತಸ್ರಾವ, ತಾಯಿ ಮರಣ ಪ್ರಮಾಣಕ್ಕೆ ಪ್ರಮುಖ ಅಂಶವಾಗಿದೆ. ಇದರ ಬಗ್ಗೆ ಆರೋಗ್ಯ ಇಲಾಖೆಯವರು ಹೆಚ್ಚು ಒತ್ತು ನೀಡಬೇಕು ಎಂದ ಅವರು ಗರ್ಭೀಣಿ ಮಹಿಳೆಯರು ತಿಂಗಳ ಚಿಕಿತ್ಸೆಗೆ ಬಂದಾಗ ಅವರಿಗೆ ಇತರ ಯಾವ ಕಾಯಿಲೆಗಳು ಇವೆ ಎಂಬುದರ ಪರೀಕ್ಷೆ ಮಾಡುವುದರೊಂದಿಗೆ ಅವುಗಳನ್ನು ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸ್ತಕ ಸಾಲಿನಲ್ಲಿ 10 ಜನ ತಾಯಂದಿರು ಮರಣ ಹೊಂದಿದ್ದಾರೆ ಹಾಗೂ 30 ಶಿಶುಗಳ ಮರಣ ಸಂಭವಿಸಿವೆ ಎಂದ ಜಿಲ್ಲಾಧಿಕಾರಿ, 6 ಪ್ರಕರಣಗಳಲ್ಲಿ ಮರಣ ಸಂಭವಿಸುವ ಸಾಧ್ಯತೆ ಇದ್ದ ಗರ್ಭಿಣಿ ಮಹಿಳೆಯರಿಗೆ ಸೂಕ್ತ ಚಿಕಿತ್ಸೆ ನೀಡಿ ಅವರ ಪ್ರಾಣ ಉಳಿಸಲಾಗಿದೆ ಎಂದರು.
ತಾಯಿ ಶಿಶು ಮರಣ ಸಂಭವಿಸಿದಾಗ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದ ಅವರು, ಹೊರ ಜಿಲ್ಲೆಯಿಂದ ಈ ಜಿಲ್ಲೆಗೆ ವೈದ್ಯಕೀಯ ಚಿಕಿತ್ಸೆಗೆ ಆಗಮಿಸಿ, ಮರಣ ಹೊಂದಿದಾಗ ಆ ಜಿಲ್ಲೆಯ ಜಿಲ್ಲಾ ಮಟ್ಟದ ಸಮಿತಿಯು ಈ ಬಗ್ಗೆ ಪರಿಶೀಲಿಸಲು ಪತ್ರವನ್ನು ಬರೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ. ರಾಮ ಹಾಗೂ ಇತರ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.







