ಉಡುಪಿ: ಮೆಗಾ ಲೋಕ ಅದಾಲತ್ನಲ್ಲಿ 3007 ಪ್ರಕರಣ ಇತ್ಯರ್ಥ; 9.54 ಕೋಟಿ ರೂ. ಪರಿಹಾರ ಮೊತ್ತ ಘೋಷಣೆ
ಉಡುಪಿ, ಮಾ.27: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಶನಿವಾರ ಜಿಲ್ಲೆಯ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಆಯೋಜಿಸಲಾದ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟು 3007 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಪರಿಹಾರ ಮೊತ್ತವನ್ನು ಘೋಷಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ.ಎನ್.ಸುಬ್ರಮಣ್ಯ ತಿಳಿಸಿದ್ದಾರೆ.
ಇಂದು ಒಂದೇ ದಿನದಲ್ಲಿ ಒಟ್ಟು 3007 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಇವುಗಳಲ್ಲಿ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು-45, ಚೆಕ್ಕು ಅಮಾನ್ಯ ಪ್ರಕರಣ-311, ಬ್ಯಾಂಕ್/ಹಣ ವಸೂಲಾತಿ ಪ್ರಕರಣ-24, ಎಂವಿಸಿ ಪ್ರಕರಣ-220, ಎಂಎಂಆರ್ಡಿ ಆ್ಯಕ್ಟ್ ಪ್ರಕರಣ-44, ಸಿವಿಲ್ ಪ್ರಕರಣ-177, ಇತರೇ ಕ್ರಿಮಿನಲ್ ಪ್ರಕರಣ-2186 ಹಾಗೂ ವ್ಯಾಜ್ಯ ಪೂರ್ವ ದಾವೆ-52 ಸೇರಿವೆ ಎಂದವರು ವಿವರಿಸಿದರು.
ಈ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥ ಪಡಿಸಿದ್ದು, ಇವುಗಳಲ್ಲಿ ಒಟ್ಟು 9,54,19,075 ರೂ. ಪರಿಹಾರದ ಮೊತ್ತವನ್ನು ಘೋಷಿಲಾ ಯಿತು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ಕಾರ್ಕಳ, ವಕೀಲರ ಸಂಘ ಉಡುಪಿ, ಕುಂದಾಪುರ, ಕಾರ್ಕಳ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಗಳ ಸಂಪೂರ್ಣ ಸಹಕಾರದೊಂದಿಗೆ ಲೋಕ ಅದಾಲತ್ನ್ನು ಯಶಸ್ವಿಗೊಳಿಸಲಾಯಿತು ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.







