ರಾಜ್ಯದ ಹಲವಡೆ ಮುಂದಿನ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು, ಮಾ.30: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಂಟಿಗ್ರೇಡ್ ಏರಿಕೆಯಾಗುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದರು.
ಮಂಗಳವಾರ, ಬುಧವಾರ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 41.6, ರಾಯಚೂರಿನಲ್ಲಿ 39.8, ಬೀದರ್ 38.6, ಗದಗ 37.2, ಕೊಪ್ಪಳ 37.5, ಬೆಳಗಾವಿ 36.7, ಧಾರವಾಡ 36.4, ದಾವಣಗೆರೆಯಲ್ಲಿ 36 ಡಿಗ್ರಿ ಸೆಂಟಿಗ್ರೇಡ್ ದಾಖಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು, ಬೆಂಗಳೂರಿನಲ್ಲಿ ಉಷ್ಣಾಂಶ 34.8 ಡಿಗ್ರಿ ಸೆಂಟಿಗ್ರೇಡ್ ದಾಖಲಾಗಿದೆ ಎಂದ ಅವರು, ಉಡುಪಿ ಹಾಗೂ ದ.ಕನ್ನಡ ಜಿಲ್ಲೆಗಳ ಕೆಲವು ಕಡೆ ಬುಧವಾರ(ಮಾ.31) ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಎ.1 ರಿಂದ 3 ರವರೆಗೆ ಒಣಹವೆ ಇರಲಿದೆ. ಮೈಸೂರು, ಚಾಮರಾಜನಗರ, ಕೊಡಗು, ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಮಾ.30, 31 ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದರು.





