ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ್

ಕಲಬುರಗಿ, ಮಾ.30: ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ. ಬಿಜೆಪಿ ಸರಕಾರದ ವೈಫಲ್ಯಗಳೆ ನಮಗೆ ಪ್ರಮುಖ ಅಸ್ತ್ರಗಳಾಗಿವೆ ಎಂದರು.
ಬಿಜೆಪಿ ಸರಕಾರ ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೆರವು ನೀಡಿಲ್ಲ. ಯುವಕರಿಗೆ ಉದ್ಯೋಗ ಇಲ್ಲ. ಬ್ಯಾಂಕ್ಗಳಿಂದಲೂ ಅನುಕೂಲವಾಗಿಲ್ಲ. ತೆರಿಗೆಗಳನ್ನು ಏರಿಸಿದ್ದಾರೆ. ಅಡುಗೆ ಅನಿಲ, ತರಕಾರಿ, ಫಲಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ. ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ನೆರವು ನೀಡುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸರಕಾರದ ವಿರುದ್ಧ ಜನರೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಬಸವಕಲ್ಯಾಣದಲ್ಲಿ ಜೆಡಿಎಸ್ನವರು ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಅದು ಎಷ್ಟರಮಟ್ಟಿಗೆ ಪರಿಣಾಮ ಬೀರುತ್ತದೆ ಅನ್ನೋದನ್ನು ಕಾದು ನೋಡೋಣ. ಬಸವಕಲ್ಯಾಣದಲ್ಲಿ ಶಾಸಕರಾಗಿದ್ದ ನಾರಾಯಣರಾವ್ ಅವರ ಧರ್ಮ ಪತ್ನಿಗೆ ಎಲ್ಲ ನಾಯಕರ ಒಮ್ಮತದ ತೀರ್ಮಾನದಂತೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು, ಎಲ್ಲರೂ ಅವರನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ ಎಂದು ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರು ಹೋರಾಟ ಮಾಡಿ ಈ ಭಾಗಕ್ಕೆ ನ್ಯಾಯ ಕೊಡಿಸಲು ಶ್ರಮಿಸಿದ್ದಾರೆ. ಆದರೆ, ಈ ಸರಕಾರದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನೆ ಬಿಡುಗಡೆ ಮಾಡಿಲ್ಲ. ಇದನ್ನು ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
ಸಿಡಿ ಪ್ರಕರಣದ ಬಗ್ಗೆ ಮಾತನಾಡಲ್ಲ: ನಾವು ಅಧಿವೇಶನದಲ್ಲಿ ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇವೆ. ನಾನು ಚುನಾವಣೆ ಮಾಡಲು ಬಂದಿದ್ದೇನೆ. ನಾನು ತಲೆ ಕೆಡಿಸಿಕೊಳ್ಳಲು ಹೋಗಲ್ಲ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
ನನ್ನ ವಿರುದ್ಧದ ಆರೋಪಗಳು, ಪ್ರತಿಭಟನೆಗಳನ್ನೆಲ್ಲ ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಂಡಿದ್ದೇನೆ. ನಮ್ಮ ಕಾರ್ಯಕರ್ತರಿಗೂ ಹೇಳುತ್ತಿದ್ದೇನೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಅದು ಬಿಜೆಪಿಯವರ ಸಂಸ್ಕೃತಿಯೋ ಅಥವಾ ಬೇರೆಯವರ ಸಂಸ್ಕೃತಿಯೋ ಎಲ್ಲ ಜನ ಗಮನಿಸುತ್ತಿದ್ದಾರೆ. ನೀವು ಶಾಂತ ರೀತಿಯಿಂದ ಇರಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.







