ಶೃಂಗೇರಿ ಸಿರಿಮನೆ ಜಲಪಾತದ ಬಳಿ ಅರಣ್ಯ ಒತ್ತುವರಿ: ತೆರವು ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು, ಎ.1: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತದ ಬಳಿ ಇರುವ ಅರಣ್ಯ ಭೂಮಿ ಒತ್ತುವರಿ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಒಂದು ತಿಂಗಳೊಳಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಈ ಸಂಬಂಧ ಸ್ಥಳೀಯ ನಿವಾಸಿ ರಾಮಚಂದ್ರರಾವ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಸರಕಾರದ ಪರ ವಾದಿಸಿದ ವಕೀಲರು, ಅರ್ಜಿದಾರರು ಆರೋಪಿಸಿರುವಂತೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಇನ್ನು ಕೆಲ ಕಟ್ಟಡಗಳನ್ನು ಸಕ್ರಮಗೊಳಿಸುವ ಕೆಲಸವೂ ಆಗುತ್ತಿದೆ. ಹೀಗಾಗಿ ವರದಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 2020ರ ಜ.22ರಂದು ಒತ್ತುವರಿ ತೆರವು ಮಾಡುವ ಸಂಬಂಧ ಕೈಗೊಳ್ಳುವ ಕ್ರಮಗಳ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಕೋರ್ಟ್ ನಿರ್ದೇಶಿಸಿತ್ತು. ಇದೇ ವಿಚಾರವಾಗಿ ಫೆ.23ರಂದು ನಡೆದ ವಿಚಾರಣೆ ವೇಳೆ ಮತ್ತೆ ಮೂರು ವಾರ ಕಾಲಾವಕಾಶ ನೀಡಲಾಗಿತ್ತು. ಆದರೂ, ಸರಕಾರ ಈವರೆಗೆ ಪ್ರಮಾಣಪತ್ರ ಸಲ್ಲಿಸಿಲ್ಲ. ಹೀಗಾಗಿ, ಕೊನೆಯ ಅವಕಾಶ ನೀಡುತ್ತಿದ್ದು, ಮುಂದಿನ ಒಂದು ತಿಂಗಳೊಳಗೆ ಸರಕಾರ ಈ ಕುರಿತು ಪ್ರಮಾಣಪತ್ರ ಸಲ್ಲಿಸಬೇಕು ಎಂದು ತಾಕೀತು ಮಾಡಿ, ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿತು.
ಏನಿದು ಪ್ರಕರಣ: ಶೃಂಗೇರಿ ತಾಲೂಕಿನ ಎರಡದಹಳ್ಳಿ ಗ್ರಾಮದ ಸರ್ವೇ ನಂ.173 ಮತ್ತು 199ರಲ್ಲಿನ ಜಾಗ ಸಂರಕ್ಷಿತ ಅರಣ್ಯ ಪ್ರದೇಶವಾಗಿದೆ. ಸಮೀಪದಲ್ಲಿ ಸಿರಿಮನೆ ಜಲಪಾತವಿದ್ದು, ಕೆಲ ಪ್ರಭಾವಿಗಳು ಅಭಿವೃದ್ಧಿ ನೆಪದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದ್ದರೂ ಸರಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಜಲಪಾತದ ಬಳಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕು ಹಾಗೂ ಮತ್ತು ಜಲಪಾತದ ಸುತ್ತಲಿನ ಪ್ರದೇಶ ಸಂರಕ್ಷಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.







