ಉಪಚುನಾವಣೆ; ಅಂತಿಮ ಕಣದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ 30 ಅಭ್ಯರ್ಥಿಗಳು

ಬೆಂಗಳೂರು, ಎ. 3: ರಾಜ್ಯದ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪ್ರತಿಷ್ಠೆ, ಪೈಪೋಟಿ ಸೃಷ್ಟಿಸಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರು ಜಿಲ್ಲೆಯ ಮಸ್ಕಿ, ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಖಾಡ ರಂಗೇರುತ್ತಿದ್ದು, 14 ಮಂದಿ ಪಕ್ಷೇತರರು ಸೇರಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಒಟ್ಟು 30 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅಂಗಡಿ ಅವರ ಪತ್ನಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ 18 ಮಂದಿ ನಾಮಪತ್ರ ಸಲ್ಲಿಸಿದ್ದರು. ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾದ ಇಂದು 8 ಮಂದಿ ನಾಮಪತ್ರ ಹಿಂಪಡೆದಿದ್ದು, 10 ಮಂದಿ ಅಂತಿಮವಾಗಿ ಅಖಾಡದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ತೆರವಾಗಿದ್ದ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಸೇರಿದಂತೆ ಒಟ್ಟು 10 ಮಂದಿಯ ಪೈಕಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸಿದ್ದಲಿಂಗಪ್ಪ ಮತ್ತು ಚಕ್ರವರ್ತಿ ನಾಯಕ್ ನಾಮಪತ್ರ ಹಿಂಪಡೆದಿದ್ದು, 8 ಮಂದಿ ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ನಿಧನದಿಂದ ತೆರವಾಗಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಅವರ ಪತ್ನಿ ಮಾಲಾ ನಾರಾಯಣರಾವ್, ಬಿಜೆಪಿಯ ಶರಣ ಬಸಪ್ಪ ಸಲಗಾರ ಹಾಗೂ ಜೆಡಿಎಸ್ನ ಸೈಯದ್ ಯಸ್ರಬ್ ಅಲಿ ಖಾದ್ರಿ ಸೇರಿದಂತೆ 14 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಮುಳೆ ಮಾರುತಿ ರಾವ ಗೋವಿಂದರಾವ್ ಹಾಗೂ ಈರಣ್ಣಾ ಚಂದ್ರಶೇಖರ್ ಹಡಪದ ನಾಮಪತ್ರ ಹಿಂಪಡೆದಿದ್ದು, 12 ಮಂದಿ ಅಂತಿಮ ಅಖಾಡದಲ್ಲಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ, ಮಸ್ಕಿ ಮತ್ತು ಬಸವ ಕಲ್ಯಾಣ ಕ್ಷೇತ್ರಗಳನ್ನು ಉಳಿಸಿಕೊಳ್ಳುವ ಇರಾದೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹೀಗಾಗಿ ಶತಾಯ ಗತಾಯ ಉಪಚುನಾವಣೆ ಗೆಲುವಿಗೆ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಬೇಸಿಗೆಯ ಬಿರು ಬಿಸಿಲನ್ನು ಲೆಕ್ಕಿಸದೆ ಬೆವರು ಹರಿಸುತ್ತಿದ್ದಾರೆ.
ಎ.17ಕ್ಕೆ ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು ಹಾಗೂ ಪಕ್ಷಗಳ ಪದಾಧಿಕಾರಿಗಳು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.







