ಜನರು ಸಹಕರಿಸದಿದ್ದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೀದರ್, ಎ. 9: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಎಚ್ಚರಿಸಿದ್ದಾರೆ.
ಶುಕ್ರವಾರ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕೇವಲ ಸರಕಾರದ ಹೊಣೆಯಲ್ಲ. ಸಾರ್ವಜನಿಕರ ಜವಾಬ್ದಾರಿಯೂ ಇದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾತ್ರಿ ಕರ್ಫ್ಯೂ ಜಾರಿ ಅನಿವಾರ್ಯವಾಗಿದೆ ಎಂದರು.
ನೈಟ್ ಕರ್ಫ್ಯೂ ಜಾರಿ ಮಾಡಲಾಗಿರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳನ್ನ ಕಟ್ಟುನಿಟ್ಟಾಗಿ ಅನುಷ್ಠಾಕ್ಕೆ ತರುವಂತೆ ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದ ಅವರು, ಜನರಿಗೆ ಈಗ ಕೋವಿಡ್ ಬಗ್ಗೆ ಹೆಚ್ಚಿಗೆ ಹೇಳಬೇಕಾದ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣ ತಪ್ಪಿದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರು ಮಾರ್ಗಸೂಚಿ ಪಾಲಿಸುವ ಮೂಲಕ ಕಠಿಣ ಕ್ರಮಕ್ಕೆ ಅವಕಾಶ ಮಾಡಿಕೊಡಬಾರದು. ಸದ್ಯಕ್ಕೆ ನಾವೇ ಪರಿಸ್ಥಿತಿಯನ್ನು ನಿಭಾಯಿಸುವ ಸ್ಥಿತಿಯಲ್ಲಿದ್ದೇವೆ. ಆದರೆ, ಇದಕ್ಕೆ ಜನರ ಸಹಕಾರ ಅತಿಮುಖ್ಯ. ಜನರ ಸಹಕಾರ ಸಿಕ್ಕಿದ್ದೇ ಆದರೆ ಇದನ್ನು ನಾವು ಯಾವುದೇ ಲಾಕ್ಡೌನ್ ಇಲ್ಲದೆ, ಆರ್ಥಿಕ ನಿರ್ಬಂಧ ಎದುರಿಸದೇ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯಲ್ಲಿ ನಾವಿರಬೇಕು ಎಂದು ಬೊಮ್ಮಾಯಿ ಹೇಳಿದರು.
ರಾತ್ರಿ ವೇಳೆ ಬಾರ್ ಮತ್ತು ಪಬ್ಗಳನ್ನು ಬಂದ್ ಮಾಡಲಾಗುವುದು. ಆದರೆ, ಬಸ್ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸುವವರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಕಾರ್ಯಕ್ರಮಗಳ ಆಯೋಜಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
`ರಾತ್ರಿ ವೇಳೆ ಕೋವಿಡ್-19 ಹರಡದಂತೆ ತಡೆಯುವ ದೃಷ್ಟಿಯಿಂದ ಕೆಲ ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜನರ ಸಹಕಾರ ಅತಿಮುಖ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ'
-ಬಸವರಾಜ ಬೊಮ್ಮಾಯಿ, ಗೃಹ ಸಚಿವ







