ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗಾಗಿ ಅರ್ಜಿ ಆಹ್ವಾನ
ಉಡುಪಿ, ಎ.12: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಗಳು ಕರ್ನಾಟಕ ದಲ್ಲಿರುವ ಕನ್ನಡ ಬಾರದ ಎಲ್ಲ ಸರಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ರಾಜ್ಯದ ಎಲ್ಲ ನಗರಸಭೆ, ಕವಿಪ್ರನಿನಿ, ಕೆಎಸ್ಸಾರ್ಟಿಸಿ, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರಕಾರಿ ಅನುದಾನ ಪಡೆ ಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಇದಕ್ಕಾಗಿ ಹೆಸರು ನೋಂದಾಯಿಸಿಕೊಳ್ಳಬಹುದು.
ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ಹೆಸರು ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಸರಕಾರದ ಅಧಿಸೂಚನೆಯಂತೆ ವಿನಾಯಿತಿ ಇರುತ್ತದೆ.
ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 18ರಿಂದ 60 ವರ್ಷದೊಳಗಿನ ಆಸಕ್ತರು ಅರ್ಜಿ ಭರ್ತಿ ಮಾಡಿ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಪ್ಟ್ನ್ನು ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುತ್ತದೆ. ತರಬೇತಿ ಮತ್ತು ಸಂಪರ್ಕ ಶಿಬಿರದ ಕೊನೆಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಇದಕ್ಕಾಗಿ ಅರ್ಜಿ ಸಲ್ಲಿಸಲು ಎ.30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಭಾರ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.







