ವಾರಾಂತ್ಯ ಕರ್ಫ್ಯೂ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಜೀವನ ಸ್ತಬ್ಧ

ಚಿಕ್ಕಮಗಳೂರು : ಕೊರೋನ ನಿಯಂತ್ರಣದ ಉದ್ದೇಶದಿಂದ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ರಾಜ್ಯ ಸರಕಾರದ ಕ್ರಮಕ್ಕೆ ಕಾಫಿನಾಡಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸುತ್ತಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರ ಬಂದಿಲ್ಲ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳು ಖಾಲಿ ಖಾಲಿಯಾಗಿದ್ದು, ಜನಸಂಚಾರ, ವಾಹನಗಳ ಸಂಚಾರ ಇಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿವೆ.
ಶನಿವಾರ ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಅಂಗಡಿ ಮುಂಗಟ್ಟುಗಳು ತೆರೆದುಕೊಂಡು ವ್ಯಾಪಾರ ವಹಿವಾಟು ನಡೆಸಿದವು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲೂ ಜನಸಂಚಾರ, ವಾಹನ ಸಂಚಾರ ಸ್ತಬ್ಧಗೊಂಡಿದ್ದು, ಆಸ್ಪತ್ರೆ, ಮೆಡಿಕಲ್, ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪೊಲೀಸರು ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದು, ಅನಗತ್ಯವಾಗಿ ಓಡಾಡುವ ಜನರು, ವಾಹನಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.















