ಹೈಕೋರ್ಟ್ ಎಚ್ಚರಿಕೆ ಬಳಿಕ ನಾಲ್ವರು ನಿವೃತ್ತ ಯೋಧರಿಗೆ ಭೂಮಿ ಮಂಜೂರು ಮಾಡಿದ ಮೈಸೂರು ಡಿಸಿ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಬೆಂಗಳೂರು, ಎ.25: ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ನ್ಯಾಯಾಲಯದ ಆದೇಶದಂತೆ ನಾಲ್ವರು ನಿವೃತ್ತ ಯೋಧರಿಗೆ ಭೂಮಿ ಮಂಜೂರು ಮಾಡಿದ್ದಾರೆ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶ ಮಾಡಿದ ಬಳಿಕವೂ ತಮಗೆ ಜಮೀನು ಮಂಜೂರು ಮಾಡಿಲ್ಲ ಎಂದು ಮೈಸೂರಿನ ನಿವೃತ್ತ ಯೋಧರಾದ ಕೆ.ಬಿ.ನಾಣಯ್ಯ, ಬಿ.ಎನ್. ಶಿವಲಿಂಗಪ್ಪ, ಕೆ.ಬಿ.ಭೀಮಯ್ಯ ಮತ್ತು ಇಕ್ಬಾಲ್ ಹುಸೈನ್ ವಿಭಾಗೀಯ ಪೀಠದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ್ದ ಸಿಜೆ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ಮೈಸೂರು ಜಿಲ್ಲಾಡಳಿತವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.
ದೇಶ ಕಾಯುವ ಯೋಧರಿಗೆ ಭೂಮಿ ಮಂಜೂರು ಮಾಡದೆ ವಿಳಂಬ ಮಾಡಿರುವುದು, ಕಚೇರಿಯಿಂದ ಕಚೇರಿಗೆ ಅಲೆಯುವಂತೆ ಮಾಡಿರುವುದು ಸರಿಯಾದ ನಡವಳಿಕೆಯಲ್ಲ. ನ್ಯಾಯಾಂಗ ನಿಂದನೆ ಅರ್ಜಿ ದಾಖಲಾದ ಬಳಿಕ ಭೂಮಿ ಹಂಚಿಕೆ ಮಾಡಲು ನೆಪಗಳನ್ನು ಹುಡುಕುತ್ತಿದ್ದೀರಿ ಎಂದು ಜಿಲ್ಲಾಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೇ, ಕೂಡಲೇ ಭೂಮಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ಮೈಸೂರು ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಅವರು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಿವೃತ್ತ ಯೋಧರಿಗೆ ಭೂಮಿ ಮಂಜೂರು ಮಾಡಿರುವುದಾಗಿ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಸರಕಾರಿ ವಕೀಲ ಕಿರಣ್ ಕುಮಾರ್ ಅವರು ಜಿಲ್ಲಾಧಿಕಾರಿಯ ಪ್ರಮಾಣಪತ್ರವನ್ನು ಕೋರ್ಟ್ಗೆ ಸಲ್ಲಿಸಿದ್ದು, ನ್ಯಾಯಾಲಯದ ಆದೇಶದಂತೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಪಮಾಣ ಪತ್ರ ದಾಖಲಿಸಿಕೊಂಡಿರುವ ಪೀಠ ಅರ್ಜಿದಾರ ಯೋಧರ ಸ್ಪಷ್ಟನೆಗಾಗಿ ವಿಚಾರಣೆ ಮುಂದೂಡಿದೆ.
ಏನಿದು ಪ್ರಕರಣ: ಅರ್ಜಿದಾರರಾದ ನಿವೃತ್ತ ಯೋಧರಿಗೆ ಜಮೀನು ಮಂಜೂರು ಮಾಡಲು ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಯೋಧರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕಸದಸ್ಯ ಪೀಠ 2013ರಲ್ಲಿ ಭೂಮಿ ಮಂಜೂರು ಮಾಡುವಂತೆ ಸರಕಾರಕ್ಕೆ ಆದೇಶಿಸಿತ್ತು. ಆದರೆ, ಜಿಲ್ಲಾಡಳಿತ ನ್ಯಾಯಾಲಯದ ಆದೇಶ ಪಾಲನೆ ಮಾಡಿರಲಿಲ್ಲ. ಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ ಬಳಿಕ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅರ್ಜಿದಾರರಿಗೆ ಹಂಚಿಕೆ ಮಾಡಲು ಸಾಕಷ್ಟು ಭೂಮಿ ಲಭ್ಯವಿಲ್ಲ ಎಂದಿದ್ದರು. ವಾದ ಒಪ್ಪಲು ನಿರಾಕರಿಸಿದ್ದ ಪೀಠ, ಮಾಜಿ ಯೋಧರಿಗೆ ಜಮೀನು ನೀಡಲು ಸಾಧ್ಯವಿಲ್ಲವಾದರೆ ಆ ಕುರಿತು ಸರಕಾರ ತನ್ನ ನೀತಿ ಬದಲಿಸಲಿ. ಅದು ಬಿಟ್ಟು ಕೆಲ ಯೋಧರಿಗೆ ಜಮೀನು ಮಂಜೂರು ಮಾಡಿ, ಉಳಿದವರಿಗೆ ನೀಡದೇ ತಾರತಮ್ಯ ಮಾಡುವುದನ್ನು ಕೋರ್ಟ್ ಎಂದಿಗೂ ಸಹಿಸುವುದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತಲ್ಲದೇ, ಕೂಡಲೇ ಭೂಮಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿತ್ತು.







