ಆಕ್ಸಿಜನ್ ಕೊರತೆಯಿಲ್ಲ, ಯಾವುದೇ ಆತಂಕವೂ ಬೇಡ : ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ

ಕೊಟ ಶ್ರೀನಿವಾಸ ಪೂಜಾರಿ
ಮಂಗಳೂರು, ಮೇ 3: ದ.ಕ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಜನರು ಆತಂಕ ಪಡುವ ಅಗತ್ಯವೂ ಇಲ್ಲ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೊಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸೋಮವಾರ ಶಾಸಕರು ಮತ್ತು ಸಂಸದರೊಂದಿಗೆ ತುರ್ತು ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಕ್ಸಿಜನ್ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಪಾಲಕ್ಕಾಡ್ನಿಂದ 25 ಟನ್ ಆಕ್ಸಿಜನ್ ಸರಬರಾಜಾಗುತ್ತಿದೆ. ಈವರೆಗೆ ಸರಬರಾಜಿನ ಕೊರತೆಯಾಗಿಲ್ಲ. ಪಾಲಕ್ಕಾಡ್ನಿಂದ ಬರುವ ಸರಾಸರಿ 6 ಟನ್ ಆಕ್ಸಿಜನ್ ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಮನವಿ ಮಾಡಲಾಗಿದೆ ಎಂದರು.
ಸದ್ಯಕ್ಕೆ ಜಿಲ್ಲೆಯಲ್ಲಿ 430 ಮಂದಿ ಆಕ್ಸಿಜನ್ಯುಕ್ತ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯು ಮತ್ತು ವೆಂಟಿಲೇಟರ್ ಸೌಲಭ್ಯದಲ್ಲಿ 200ಕ್ಕೂ ಅಧಿಕ ಕೊರೋನ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ವೆನ್ಲಾಕ್ನಲ್ಲಿ ಹೆಚ್ಚುವರಿ ವೆಂಟಿಲೇಟರ್ ಜೋಡಿಸಲು ತುರ್ತುಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹೊಸ ಆಕ್ಸಿಜನ್ ಉತ್ಪಾದನಾ ಘಟಕ ಸಹಿತ ಜಿಲ್ಲೆಯಲ್ಲಿ ಕೊರೋನ ಸೋಂಕು ಎದುರಿಸಲು ಕೈಗೊಂಡ ಕ್ರಮದ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಹಾಗೂ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭೋಗ್ ವಿವರಿಸಿದರು.
ತುರ್ತುಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು.







