ಭಟ್ಕಳ: ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲೂ ಕೋವಿಡ್ ಪ್ಯಾಕೇಜ್ ಘೋಷಿಸುವಂತೆ ಐಟಾ ಆಗ್ರಹ

ಭಟ್ಕಳ: ತೆಲಂಗಾಣ ಸರ್ಕಾರ ಅಲ್ಲಿನ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದು ಅದರ ಮಾದರಿಯಲ್ಲೇ ರಾಜ್ಯದಲ್ಲೂ ಖಾಸಗಿ ಶಾಲಾ ಶಿಕ್ಷಕರಿಗೆ ಕೋವಿಡ್ ಪ್ಯಾಕೇಜ್ ಘೋಷಿಸಬೇಕೆಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಅವರು ಸಹಾಯಕ ಆಯುಕ್ತರ ಮೂಲಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತಂತೆ ಸೋಮವಾರ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಿರುವ ಅವರು, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಅತ್ಯಂತ ಯಾತನಮಯ ಬದುಕನ್ನು ಸಾಗಿಸುತ್ತಿದ್ದಾರೆ. ಕೇವಲ 30%, 40% ವೇತನದೊಂದಿಗೆ ದಿನ ದೂಡುತ್ತಿದ್ದಾರೆ. ಈಗ ಕೋವಿಡ್ ಎರಡನೇ ಅಲೆಯಿಂದ ಶಾಲೆಗಳು ಬಂದ್ ಆಗಿದ್ದು ವೇತನ ಸಿಗುವುದು ತುಂಬಾ ಕಷ್ಟವಾಗಿದೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಖಾಸಗಿ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಲು ಮುಂದೆ ಬರಬೇಕು ಮತ್ತು ಅವರಿಗೆ ತೆಲಂಗಾಣ ರಾಜ್ಯದ ಮಾದರಿಯಲ್ಲಿ ಪ್ರತಿ ತಿಂಗಳು ಕನಿಷ್ಠ 5 ಸಾವಿರ ರೂ ಹಾಗೂ 25 ಕೆಜಿ ಅಕ್ಕಿಯನ್ನು ನೀಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಭಟ್ಕಳ ತಾಲೂಕು ಅಧ್ಯಕ್ಷ ಇಮ್ರಾನ್ ಮುಲ್ಲಾ ಉಪಸ್ಥಿತರಿದ್ದರು.





