ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನ ಸೋಂಕಿನಿಂದ ನಿಧನ

ಬೆಂಗಳೂರು, ಮೇ 14: ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ ಪ್ರಕಾಶ್(68) ಅವರು ಕೊರೋನ ವೈರಸ್ ಸೋಂಕಿನಿಂದಾಗಿ ಅಸುನೀಗಿದ್ದಾರೆ.
ಪತ್ನಿ, ಪುತ್ರಿ, ಅಳಿಯನ ಸಹಿತ ಅಪಾರ ಸಂಖ್ಯೆಯ ಬಂಧು-ಮಿತ್ರರನ್ನು ಶ್ರೀಯುತರು ಅಗಲಿದ್ದಾರೆ. ಹತ್ತು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹದೇವ ಪ್ರಕಾಶ್ ಅವರು ನಗರದಲ್ಲಿರುವ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶುಕ್ರವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳೇಬೇಕುಪ್ಪೆ ಗ್ರಾಮದವರಾದ ಮಹದೇವ ಪ್ರಕಾಶ್ ಅವರು ಅಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸ, ಬಳಿಕ ಬೆಂಗಳೂರಿನಲ್ಲಿ ಹೆಚ್ಚಿನ ಶಿಕ್ಷಣ ಪಡೆದಿದ್ದಾರೆಂದು ಗೊತ್ತಾಗಿದೆ. 80ರ ದಶಕದಲ್ಲಿ ಲೋಕವಾಣಿ ಪತ್ರಿಕೆಯ ಸಂಪಾದಕರಾಗಿದ್ದ ಅವರು, ಕಸಾಪದ `ಕನ್ನಡ ನುಡಿ' ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ‘ವಾರದ ಆರಂಭ’ ವಾರಪತ್ರಿಕೆಯನ್ನು ಆರಂಭಿಸಿದ್ದ ಅವರು, ಅದರ ನಂತರ `ಈ ಭಾನುವಾರ' ಮಾಸಪತ್ರಿಕೆಯನ್ನು ಸ್ವತಃ ತಮ್ಮ ಸಂಪಾದಕತ್ವದಲ್ಲಿ ಹೊರತರುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಮಾಡಿದ್ದರು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ರಾಜಕೀಯ ವಿಶ್ಲೇಷಕರಾಗಿ ಗುರುತಿಸಿಕೊಂಡಿದ್ದ ಮಹದೇವ ಪ್ರಕಾಶ್, ಕೆಲ ಪತ್ರಿಕೆಗಳಲ್ಲಿ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಅಂಕಣಗಳನ್ನು ಬರೆಯುತ್ತಿದ್ದರು.
ಸಿಎಂ ಸಹಿತ ಗಣ್ಯರ ಕಂಬನಿ: ಪತ್ರಕರ್ತ ಮಹದೇವ ಪ್ರಕಾಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಈಶ್ವರಪ್ಪ, ಸುರೇಶ್ ಕುಮಾರ್, ನಾರಾಯಣಗೌಡ, ಕೆ.ಗೋಪಾಲಯ್ಯ, ವಿ.ಸೋಮಣ್ಣ, ಮಾಜಿ ಸಚಿವ ಸಿ.ಟಿ.ರವಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ನನಗೆ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ, ಈ ಭಾನುವಾರ ಪತ್ರಿಕೆಯ ಸಂಪಾದಕ, ಅತ್ಯುತ್ತಮ ವಾಗ್ಮಿಯೂ ಆಗಿದ್ದ ಮಹದೇವ ಪ್ರಕಾಶ್ ಅವರ ಕೋವಿಡ್ಗೆ ಬಲಿಯಾಗಿದ್ದು ಅತ್ಯಂತ ದುರದೃಷ್ಟಕರ. ಕರ್ನಾಟಕದ ರಾಜಕೀಯ ವಿದ್ಯಮಾನಗಳ ಕುರಿತು ತಮ್ಮ ಪತ್ರಿಕೆಯಲ್ಲಿ, ಪತ್ರಿಕೆಗಳ ಅಂಕಣಗಳಲ್ಲಿ ಅಧ್ಯಯನಶೀಲ ಲೇಖನಗಳನ್ನು ಪ್ರಕಟಿಸುತ್ತಿದ್ದ ಅವರು, ವಿದ್ಯುನ್ಮಾನ ಮಾಧ್ಯಮಗಳ ಚರ್ಚೆಯಲ್ಲಿಯೂ ಸಮರ್ಥವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಅವರ ನಿಧನ ಮಾಧ್ಯಮ ಲೋಕಕ್ಕೆ ಆದ ನಷ್ಟ'
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ
`ಕನಕಪುರ ತಾಲೂಕಿನ ಮರಳೇಬೇಕುಪ್ಪೆ ಗ್ರಾಮ ಮೂಲದವರಾದ ಮಹದೇವ ಪ್ರಕಾಶ್ ಅವರು ಅಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ನನಗೆ ವೈಯಕ್ತಿಕವಾಗಿಯೂ ಪರಿಚಿತರಿದ್ದರು. ಹಲವು ಪತ್ರಿಕೆಗಳಲ್ಲಿ ಅಂಕಣಕಾರರೂ ಆಗಿದ್ದ ಅವರ ಅಂಕಣಗಳು ನೇರ, ನಿಷ್ಠುರವಾಗಿದ್ದು, ಜನಪ್ರಿಯತೆ ಗಳಿಸಿದ್ದವು. ಅಲ್ಲದೆ, ಅವರು ಅನೇಕ ಪುಸ್ತಕಗಳನ್ನು ಬರೆದಿದ್ದರು. ಅವರ ನಿಧನ ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ'
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ







