ಅನೈತಿಕ ಸಂಬಂಧ ಒಪ್ಪಿಕೊಳ್ಳಲ್ಲ ಎಂದಿದ್ದಕ್ಕೆ ಮೂತ್ರ ಕುಡಿಸಿದರು: ಯುವಕನ ಆರೋಪ
ಗೋಣಿಬೀಡು ಠಾಣಾಧಿಕಾರಿಯಿಂದ ದಲಿತ ಯುವಕನ ಮೇಲೆ ದೌರ್ಜನ್ಯ ಪ್ರಕರಣ

ಚಿಕ್ಕಮಗಳೂರು, ಮೇ 22: ಕಿರುಗುಂದ ಗ್ರಾಮದ ದಲಿತ ಯುವಕನ ಮೇಲೆ ಗೋಣಿಬೀಡು ಠಾಣಾಧಿಕಾರಿ ದೌರ್ಜನ್ಯ ಎಸಗಿದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ದೌರ್ಜನ್ಯದ ಸಂದರ್ಭದಲ್ಲಿ ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ್ದಲ್ಲದೇ ಮೂತ್ರವನ್ನು ನಾಲಿಗೆಯಿಂದ ನೆಕ್ಕಿಸಿಸುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾರೆಂದು ಯುವಕ ಗಂಭೀರ ಆರೋಪ ಮಾಡಿದ್ದಾರೆ.
ಕಿರುಗುಂದ ಗ್ರಾಮದ ವಿವಾಹಿತ ಮಹಿಳೆ ಹಾಗೂ ಆಕೆಯ ಪತಿಯ ನಡುವಿನ ಜಗಳದ ವಿಚಾರಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಠಾಣೆಯ ಪಿಎಸ್ಸೈ ಅರ್ಜುನ್ ಯಾವುದೇ ದೂರು ಇಲ್ಲದೆ ಅದೇ ಗ್ರಾಮದ ದಲಿತ ಸಮುದಾಯದ ಯುವಕ ಪುನೀತ್(22) ಎಂಬ ಯುವಕನ ಮೇಲೆ ಶಂಕೆಗೊಂಡು ಮೇ 10ರಂದು ಆತನನ್ನು ಗೋಣಿಬೀಡು ಠಾಣೆಗೆ ಕರೆದೊಯ್ದಿದ್ದರು ಎನ್ನಲಾಗಿದೆ. ಈ ವೇಳೆ ಯುವಕ ಪುನೀತ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಹೊರಿಸಿದ ಠಾಣಾಧಿಕಾರಿ ಅರ್ಜುನ್, ಮಹಿಳೆಯೊಂದಿಗಿನ ಸಂಬಂಧವನ್ನು ಒಪ್ಪಿಕೊಂಡು ಆಕೆಯನ್ನು ಬಚ್ಚಿಟ್ಟಿರುವುದಾಗಿ ಒಪ್ಪಿಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಪುನೀತ್ನನ್ನು ಠಾಣೆಯ ಕೊಠಡಿಯೊಂದರಲ್ಲಿ ತಲೆಕೆಳಗೆ ಮಾಡಿ ನೇತು ಹಾಕಿ ಪಿಎಸ್ಸೈ ಹಲ್ಲೆ ನಡೆಸಿದ್ದರು. ಜಾತಿ ವಿಚಾರಿಸಿ ಜಾತಿ ನಿಂದನೆ ಮಾಡಿದ್ದಾರೆ. ನಂತರ ಅಂದು ರಾತ್ರಿ 10ಕ್ಕೆ ಮನೆಗೆ ಕಳುಹಿಸಿದ್ದಾರೆಂದು ಆರೋಪಿಸಿ ಯುವಕ ಎಸ್ಪಿ, ಐಜಿ, ಡಿಐಜಿಗೆ ಪತ್ರ ಬರೆದು ತನಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದ್ದರು.
ಈ ದೂರಿನ ಮೇರೆಗೆ ಚಿಕ್ಕಮಗಳೂರು ಎಸ್ಪಿ ಘಟನೆ ಸಂಬಂಧ ತನಿಖೆ ನಡೆಸಲು ಡಿವೈಎಸ್ಪಿ ಒಬ್ಬರನ್ನು ನೇಮಿಸಿದ್ದರು. ಬಳಿಕ ಗೋಣಿಬೀಡು ಠಾಣಾಧಿಕಾರಿ ಅರ್ಜುನ್ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಿದ್ದ ಚಿಕ್ಕಮಗಳೂರು ಎಸ್ಪಿ ಎಂ.ಎಚ್.ಅಕ್ಷಯ್, ಗೋಣಿಬೀಡು ಠಾಣೆಗೆ ಮಹಿಳಾ ಪಿಎಸ್ಸೈ ಒಬ್ಬರನ್ನು ನೇಮಿಸಿದ್ದರು. ಈ ಬೆಳವಣಿಗೆಗಳ ಬಳಿಕ ಮೂಡಿಗೆರೆ ತಾಲೂಕಿನ ದಲಿತ ಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು, ಎಸ್ಪಿ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿ ಪಿಎಸ್ಸೈ ಅರ್ಜುನ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದರು. ಆದರೆ ಈ ಸಂಬಂಧ ಚಿಕ್ಕಮಗಳೂರು ಎಸ್ಪಿ ಯಾವುದೇ ಕ್ರಮಕೈಗೊಂಡಿರಲಿಲ್ಲ.

(ಪುನೀತ್ / ಪಿಎಸ್ಸೈ ಅರ್ಜುನ್)
ಈ ಬೆಳವಣಿಗೆಗಳ ಮಧ್ಯೆ ದೌರ್ಜನ್ಯಕ್ಕೊಳಗಾದ ಯುವಕ ಪುನೀತ್, ಪಿಎಸ್ಸೈ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು, ಪಿಎಸ್ಸೈ ಹಲ್ಲೆ ಮಾಡಿರುವುದಲ್ಲದೇ ಠಾಣೆಯಲ್ಲಿ ಕುಡಿಯಲು ನೀರು ಕೇಳಿದ್ದಕ್ಕೆ ಮೂತ್ರವನ್ನು ಕುಡಿಸಿದ್ದಾರೆಂದು ಆರೋಪಿಸಿದ್ದಾನೆ.
"ಮೇ 10ರಂದು ಯಾವುದೇ ದೂರು ಇಲ್ಲದಿದ್ದರೂ 112 ವಾಹನದಲ್ಲಿ ಬಂದು ನನ್ನನ್ನು ಗೋಣಿಬೀಡು ಠಾಣೆಗೆ ಕರೆದೊಯ್ದಿದ್ದರು. ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಒಪ್ಪಿಕೊಳ್ಳುವಂತೆ ಹೇಳಿದ್ದರು. ಆದರೆ ನಾನು ಒಪ್ಪಿಕೊಳ್ಳದಿದ್ದಾಗ ತಲೆಕೆಳಗೆ ಮಾಡಿ ಠಾಣೆಯಲ್ಲಿ ಕಟ್ಟಿ ಹಾಕಿ ಹಲ್ಲೆ ಮಾಡಿದರು. ಹಲ್ಲೆಯಿಂದ ನಿತ್ರಾಣಗೊಂಡಿದ್ದ ವೇಳೆ ಕುಡಿಯಲು ನೀರು ಕೇಳಿದಾಗ, ಠಾಣೆಯಲ್ಲೇ ಇದ್ದ ಕಳ್ಳತನದ ಆರೋಪಿಯಿಂದ ನನ್ನ ಬಾಯಿಗೆ ಮೂತ್ರ ಮಾಡಿಸಿದ್ದಾರೆ. ನಂತರ ಮೂತ್ರವನ್ನು ನೆಕ್ಕಿಸಿದ್ದಾರೆ. ಈ ಸಂಬಂಧ ಎಸ್ಪಿ, ಐಜಿ, ಡಿಐಜಿ ಹಾಗೂ ಮಾನವ ಹಕ್ಕು ಆಯೋಗಕ್ಕೂ ದೂರು ನೀಡಿದ್ದರೂ ಪಿಎಸ್ಸೈ ವಿರುದ್ಧ ಯಾವುದೇ ಕಾನೂನು ಕ್ರಮಕೈಗೊಂಡಿಲ್ಲ. ಠಾಣಾಧಿಕಾರಿಯನ್ನು ಅಮಾನತು ಮಾಡದೇ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಪಿಎಸ್ಸೈ ಹಲ್ಲೆ, ಅಮಾನವೀಯ ಹಿಂಸೆಯಿಂದ ನಾನು ಮಾನಸಿಕವಾಗಿ, ದೈಹಿಕವಾಗಿ ನೊಂದಿದ್ದು, ತನಗೆ ನ್ಯಾಯ ಕೊಡಿಸಿ" ಎಂದು ಪುನೀತ್ ಆಗ್ರಹಿಸಿದ್ದಾರೆ.
ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಗೋಣಿಬೀಡು ಠಾಣಾಧಿಕಾರಿ ದೌರ್ಜನ್ಯ ಎಸಗಿರುವ ಬಗ್ಗೆ ದೂರು ಬಂದಿದೆ. ಈ ಸಂಬಂಧ ತನಿಖೆಗೆ ಡಿವೈಎಸ್ಪಿ ಒಬ್ಬರನ್ನು ನೇಮಕ ಮಾಡಲಾಗಿದೆ. ತನಿಖಾ ವರದಿ ಆಧರಿಸಿ ಕ್ರಮವಹಿಸಲಾಗುವುದು. ಸದ್ಯ ಠಾಣಾಧಿಕಾರಿಯನ್ನು ಬೇರೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
- ಅಕ್ಷಯ್ ಎಂ.ಎಚ್., ಎಸ್ಪಿ







