ಡಿಸಿ, ಡಿಎಚ್ಓ ಗ್ರಾಮಾಂತರ ಪ್ರದೇಶಗಳಿಗೆ ತೆರಳಬೇಕು: ಸಂಸದ ಪ್ರತಾಪ್ ಸಿಂಹ
"ಕಚೇರಿಯಲ್ಲಿ ಕುಳಿತು ಕೋವಿಡ್ ಅಂಕಿ ಅಂಶ ಪಡೆದರೆ ಸುಧಾರಣೆ ಆಗುವುದಿಲ್ಲ"

ಮೈಸೂರು: ಪ್ರತಿದಿನ ಸಂಜೆ ವಿಡಿಯೋ ಕಾನ್ಫರೆನ್ಸ್ ಮಾಡಿಕೊಂಡು ಕೋವಿಡ್ ಅಂಕಿ ಅಂಶಗಳನ್ನು ತೆಗೆದುಕೊಂಡರೆ ಪರಿಸ್ಥಿತಿ ಸುಧಾರಣೆ ಆಗುವುದಿಲ್ಲ. ಖುದ್ದಾಗಿ ಜಿಲ್ಲಾಧಿಕಾರಿಗಳು ಹಾಗು ಆರೋಗ್ಯಾಧಿಕಾರಿಗಳು ಗ್ರಾಮಾಂತರ ಪ್ರದೇಶಗಳಿಗೆ ತೆರಳಬೇಕು ಎಂದು ಪರೋಕ್ಷವಾಗಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಪ್ರತಿನಿತ್ಯ ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರ ಪ್ರದೇಶದಲ್ಲಿ ಸ್ವಲ್ಪ ಇಳಿಮುಖವಾಗಿದೆ. ತಾಲೂಕು ಕೇಂದ್ರಗಳಲ್ಲಿ 50 ರಿಂದ 60 ಸಾವಿನ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆ ಉಸ್ತುವಾರಿ ಸಚಿವರು ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಜಿಲ್ಲಾಡಳಿತ ಪ್ರತಿದಿನ ಸಂಜೆ ಕಚೇರಿಯಲ್ಲಿ ಕುಳಿತುಕೊಂಡು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ನ ಅಂಕಿ ಅಂಶಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಪರಿಸ್ಥಿತಿ ಸುಧಾರಣೆಯಾಗುವುದಿಲ್ಲ. ಫೀಲ್ಡ್ ಗೆ ಇಳಿದು ಕೆಲಸ ಮಾಡಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಗರಂ ಆದ ಸಂಸದ ಪ್ರತಾಪ್ ಸಿಂಹ, ಖುದ್ದಾಗಿ ಜಿಲ್ಲಾಧಿಕಾರಿಗಳು, ಡಿ.ಹೆಚ್.ಒ ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಒ ಗಳು ಫೀಲ್ಡ್ ಗೆ ಇಳಿಯಬೇಕು. ಗ್ರಾಮಾಂತರ ಭಾಗದ ಸ್ಥಿತಿಗತಿ ಪರಿಶೀಲನೆ ಮಾಡಬೇಕು. ಅಲ್ಲಿನ ಕೋವಿಡ್ ಕೇರ್ ಸೆಂಟರ್ಗಳಿಗೆ ಭೇಟಿ ನೀಡಬೇಕು. ಆಗ ಮಾತ್ರ ಅಲ್ಲಿನ ವ್ಯವಸ್ಥೆ ಮತ್ತು ಅವ್ಯವಸ್ಥೆಯನ್ನು ಕಾಣಬಹುದು ಎಂದರು.
ವಿಡಿಯೋ ಕಾನ್ಫರೆನ್ಸ್ ಮಾಡುವುದು. ಅಧಿಕಾರಿಗಳು ಪಟ್ಟಿಕೊಡುವುದು. ಆ ಲಿಸ್ಟ್ನ್ನು ಮೀಡಿಯಾಕ್ಕೆ ಬಿಡುಗಡೆ ಮಾಡುವುದರಿಂದ ಸಮಸ್ಯೆ ಪರಿಹಾರ ಆಗುವುದಿಲ್ಲ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಗ್ರಾಮಾಂತರ ಪ್ರದೇಶಕ್ಕೆ ಹೋಗಿ ಮಾಹಿತಿ ಕಲೆ ಹಾಕಬೇಕು ಎಂದು ಸಂಸದರು ಸೂಚಿದರು. ರಾಜಕಾರಣಿಗಳು ನಮ್ಮ ಕೆಲಸವನ್ನು ಮಾಡುತ್ತೇವೆ. ಆದರೆ ಉನ್ನತಮಟ್ಟದ ಅಧಿಕಾರಿಗಳು ಬಹಳ ಗಂಭೀರವಾಗಿ ಕೆಲಸ ತೆಗೆದುಕೊಂಡು ಮಾಡಿದರೆ ಮಾತ್ರ ಪರಿಸ್ಥಿತಿ ನಿಭಾಹಿಸಲು ಸಾಧ್ಯ ಎಂದು ಪರೋಕ್ಷವಾಗಿ ಜಿಲ್ಲಾಧಿಕಾರಿಗಳ ವಿರುದ್ಧ ತಮ್ಮ ಅಸಮಾಧಾನವನ್ನು ಹೊರ ಹಾಕಿದರು.
ಮೈಸೂರಿನಲ್ಲಿ 20ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದ್ದು, ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.







