ಬೆಂಗಳೂರು: ಕಟ್ಟಡದಿಂದ ಜಿಗಿದು ಹಿರಿಯ ವೈದ್ಯ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ. 1: ಹಿರಿಯ ವೈದ್ಯರೊಬ್ಬರು ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕೋರಮಂಗಲ ನಿವಾಸಿ ವಿವೇಕ್ ಮಧುಸೂದನ್(60) ಮೃತ ವೈದ್ಯ ಎಂದು ಪೊಲೀಸರು ಗುರುತಿಸಿದ್ದಾರೆ.
ಮಂಗಳವಾರ ಇಲ್ಲಿನ ವಿವೇಕನಗರದ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನ 15ನೆ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಲ್ಲದೆ, ವಿವೇಕ್ ಮಧುಸೂದನ್, ಕೌಟುಂಬಿಕ ಕಲಹದಿಂದ ಪತ್ನಿಗೆ ವಿಚ್ಛೇದನ ನೀಡಿದ್ದರು. ಲಾಕ್ಡೌನ್ನಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಮಂಗಳವಾರ ಮಧ್ಯಾಹ್ನ ಅಪಾರ್ಟ್ಮೆಂಟ್ನ ಫ್ಲ್ಯಾಟ್ ಖರೀದಿ ಸೋಗಿನಲ್ಲಿ ಸ್ಥಳಕ್ಕೆ ಬಂದಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ 15ನೆ ಮಹಡಿ ಬಳಿ ಹೋಗಿ ಏಕಾಏಕಿ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ತನಿಖೆ ಮುಂದುವರೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
Next Story





