ಎಸೆಸೆಲ್ಸಿ ಪರೀಕ್ಷೆ ನಡೆಸುವ ಸರಕಾರದ ನಿರ್ಧಾರ ಅಪಕ್ವ, ಅಪ್ರಬುದ್ಧ: ಶಿಕ್ಷಣ ತಜ್ಞ ನಿರಂಜನಾರಾಧ್ಯ

ಬೆಂಗಳೂರು, ಜೂ.4: ಸರಕಾರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ ವಿಷಯ. ಇದು ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನವನ್ನು ಗೌರವಿಸಿದಂತಾಗಿದೆ. ಇದೇ ಸಂದರ್ಭದಲ್ಲಿ 10ನೆ(ಎಸೆಸೆಲ್ಸಿ) ತರಗತಿ ಪರೀಕ್ಷೆಯನ್ನು ನಡೆಸುವುದಾಗಿ ಪ್ರಕಟಿಸಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಟೀಕಿಸಿದ್ದಾರೆ.
'ಅದಕ್ಕೆ ಇರುವ ತರ್ಕಾಧಾರ ಏನೆಂಬುದು ಅರ್ಥವಾಗುತ್ತಿಲ್ಲ. ಸಾಮಾನ್ಯವಾಗಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ನಾವು ಮಂಡಳಿ ಪರೀಕ್ಷೆಗಳಿಲ್ಲದೆ ತೇರ್ಗಡೆಗೆ ಪರಿಗಣಿಸುವಾಗ ಪ್ರಥಮ ಪಿಯುಸಿಯಲ್ಲಿ ಅವರ ಸಾಧನೆ, ತರಗತಿ ಪರೀಕ್ಷೆಗಳ ಹಾಗೂ ಪ್ರಾಯೋಗಿಕ ಪರೀಕ್ಷೆಗಳ ಅಂಕ, ಅಂದರೆ ಒಂದು ವರ್ಷದ ಸಾಧನೆಯನ್ನು ಪರಿಗಣಿಸಿ ಎಲ್ಲರನ್ನೂ ತೇರ್ಗಡೆ ಮಾಡುವ ಕ್ರಮ ಅನುಸರಿಸುತ್ತೇವೆ. ಅದರ ಜೊತೆಗೆ ಅಗತ್ಯವಿದ್ದಲ್ಲಿ ಅವರು ಹಿಂದಿನ ಮಂಡಳಿ ಪರೀಕ್ಷೆಯಾದ 10ನೆ ತರಗತಿಯ ಸಾಧನೆಯನ್ನು ಪರಿಗಣಿಸಬಹುದಾಗಿದೆ. ಇಲ್ಲಿ ಸಾಧನೆಯನ್ನು ಓರೆಗಲ್ಲಿಗೆ ಹಚ್ಚಲು ಹೆಚ್ಚಿನ ಆಯಾಮಗಳು ಕಷ್ಟ ಎಂದು ಅವರು ತಿಳಿಸಿದ್ದಾರೆ.
ಇದಕ್ಕೆ ಭಿನ್ನವಾಗಿ, 10ನೇ ತರಗತಿಯಲ್ಲಿರುವ ಮಕ್ಕಳ ಸಂಚಿತ(ಕ್ಯುಮ್ಯುಲೇಟೀವ್) ಸಾಧನೆಯನ್ನು ಪರಿಗಣಿಸಿ ಮಂಡಳಿ ಪರೀಕ್ಷೆಯಿಲ್ಲದೆ ವಸ್ತುನಿಷ್ಠವಾಗಿ ಹಾಗು ವೈಜ್ಞಾನಿಕವಾಗಿ ತೇರ್ಗಡೆಗೊಳಿಸುವ ಸಾಧ್ಯತೆಗಳು ಹೆಚ್ಚಿರುತ್ತವೆ ಮತ್ತು ದೀರ್ಘಕಾಲದ ಸಾಧನೆಯನ್ನು ಪರಿಗಣಿಸಬಹುದಾಗಿದೆ ಎಂದು ನಿರಂಜನಾರಾಧ್ಯ ಅಭಿಪ್ರಾಯಪಟ್ಟಿದ್ದಾರೆ.
ಸಾಮಾನ್ಯವಾಗಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳು 1 ರಿಂದ 10ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ಕಲಿಯುತ್ತಿರುತ್ತಾರೆ. ಅಥವಾ ಕನಿಷ್ಠ ಮೂರು ವರ್ಷಗಳಾದರು ಒಂದು ಶಾಲೆಯಲ್ಲಿ( 8, 9 ಮತ್ತು 10ನೇ ತರಗತಿ). ಮಕ್ಕಳ 10 ವರ್ಷದ ಸಂಚಿತ ಸಾಧನೆ ಅಥವಾ ಮೂರು ವರ್ಷದ ಸಂಚಿತ ಸಾಧನೆ ಹೆಚ್ಚು ವಸ್ತುನಿಷ್ಠವಾಗಿರುವುದಲ್ಲದೆ ಕಲಿಕೆಯ ಹಲವು ಆಯಾಮಗಳನ್ನು ಪರಿಗಣಿಸಿ ಮಕ್ಕಳನ್ನು ತೇರ್ಗಡೆಗೊಳಿಸುವ ವಿಫುಲ ಅವಕಾಶಗಳಿವೆ ಎಂದು ಅವರು ತಿಳಿಸಿದ್ದಾರೆ.
ಪರಿಸ್ಥಿತಿ ಹೀಗಿರುವಾಗ, ಸರಕಾರ 10ನೆ ತರಗತಿಯನ್ನು ರದ್ದುಗೊಳಿಸದಿರುವುದು ಅವೈಜ್ಞಾನಿಕ ಮಾತ್ರವಲ್ಲ ಶೈಕ್ಷಣಿಕವಾಗಿ ತಪ್ಪು ನಿರ್ಧಾರ. ಜೊತೆಗೆ ಈಗಾಗಲೇ ಉಳಿದ ಎರಡು ಮಂಡಳಿಗಳಾದ ಸಿಬಿಎಸ್ಇ ಮತ್ತು ಐಸಿಎಸ್ಇ ಮಂಡಳಿಗಳು ತಮ್ಮ ಪರೀಕ್ಷೆಗಳನ್ನು ರದ್ದು ಮಾಡಿರುವಾಗ, ರಾಜ್ಯ ಮಂಡಳಿಯ ಪಠ್ಯಕ್ರಮಕ್ಕೆ ಸಂಯೋಜನೆಗೊಂಡಿರುವ ಮಕ್ಕಳ ಮೇಲೆ ಪರೀಕ್ಷೆ ಹೇರುವುದು ಅಮಾನವೀಯ, ತಾರತಮ್ಯ ಮತ್ತು ಶೈಕ್ಷಣಿಕವಾಗಿ ಅಪಕ್ವ-ಅಪ್ರಬುದ್ಧ ನಿರ್ಧಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಕ್ಕಳು ಕಳೆದ 14 ತಿಂಗಳುಗಳಿಂದ ಸಂಕಷ್ಟಕ್ಕೆ ಗುರಿಯಾಗಿದ್ದು, ಸರಿಯಾದ ಕಲಿಕಾ ವ್ಯವಸ್ಥೆಯಿಲ್ಲದೆ ಮಾನಸಿಕವಾಗಿ ಸೊರಗಿರುವ ಈ ಸಂದರ್ಭದಲ್ಲಿ ಸಮಾನಾಂತರ ತರಗತಿಯಲ್ಲಿ ಕಲಿಯುತ್ತಿರುವ ಅವರ ಗೆಳೆಯರು ಮಂಡಳಿ ಪರೀಕ್ಷೆಯಿಲ್ಲದೆ ತೇರ್ಗಡೆ ಹೊಂದಿ ಇವರು ಮಾತ್ರ ರಾಜ್ಯ ಪಠ್ಯಕ್ರಮದಲ್ಲಿ ಓದಿದಕ್ಕಾಗಿ ಪರೀಕ್ಷೆ ಬರೆಯುವುದು ಎಷ್ಟು ಸಂಮಂಜಸ. ಇದು ತಾರತಮ್ಯವಲ್ಲವೇ? ಇದು ಅತ್ಯಂತ ಅವೈಜ್ಞಾನಿಕ ನಿರ್ಧಾರ ಎಂದು ನಿರಂಜನಾರಾಧ್ಯ ಟೀಕಿಸಿದ್ದಾರೆ.
ಸಚಿವರೂ ಕೂಡಲೇ ತಮ್ಮ ನಿರ್ಧಾರವನ್ನು ಹಿಂಪಡೆದು ಮಕ್ಕಳ ಹಾಗು ಪಾಲಕರ ಆತಂಕ ಮತ್ತು ಮಾನಸಿಕ ಒತ್ತಡವನ್ನು ನಿವಾರಿಸಲು 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ವಿನಂತಿಸುತ್ತೇನೆ. ಜೊತೆಗೆ ಕಳೆದ ವರ್ಷ ಎಸೆಸೆಲ್ಸಿ ಹಾಗು ಪಿಯುಸಿಯಲ್ಲಿ ತೇರ್ಗಡೆಯಾಗದೆ ಈಗ ಪೂರಕ ಪರೀಕ್ಷೆಗಳಿಗೆ ಸಿದ್ಧವಾಗಿದ್ದ ಪುನರಾವರ್ತಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಿ ಅವರು ತಮ್ಮ ಮುಂದಿನ ಶಿಕ್ಷಣ ಮತ್ತು ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ತೀರ್ಮಾನವನ್ನು ಪ್ರಕಟಿಸಬೇಕು ಎಂದು ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ.
ನಮ್ಮ ಶಕ್ತಿ, ಸಾಮರ್ಥ್ಯ ಹಾಗು ಸಂಪನ್ಮೂಲಗಳನ್ನು ಸಾಧುವಲ್ಲದೆ ಪರೀಕ್ಷೆಗಳಿಗೆ ವ್ಯಯಿಸುವ ಬದಲು, 10 ಅಥವಾ 12ನೆ ತರಗತಿಯ ಮಕ್ಕಳಾಗಲಿ ಅಥವಾ ಇತರೆ ಯಾವುದೇ ತರಗತಿಯ ಮಕ್ಕಳ ಕಲಿಕೆ ಕಳೆದ 15 ತಿಂಗಳುಗಳಿಂದ ಸಮರ್ಪಕವಾಗಿ ನಡೆದಿಲ್ಲವೆಂಬ ಸತ್ಯವನ್ನು ಒಪ್ಪಿ, ಈ ಮಕ್ಕಳು ಮುಂದಿನ ಯಾವುದೇ ತರಗತಿಗಳಿಗೆ ತೇರ್ಗಡೆಯಾಗಿ ಹೋಗುವ ಸಂದರ್ಭದಲ್ಲಿ, 2021-22ನೇ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ಅವರಿಗೆ ಮೂರು ತಿಂಗಳ ವೇಗ ವರ್ಧಿತ ಕಲಿಕಾ ಸೇತು ಬಂಧ ಕಾರ್ಯಕ್ರಮದ ಮೂಲಕ ಕಲಿಕೆಯಲ್ಲಿನ ನಷ್ಟವನ್ನು ತುಂಬಿ ಕೊಡುವುದು ಹಾಗು ಬುನಾದಿ ಜ್ಞಾನವನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ಯೋಚಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯ ಮತ್ತು ಆದ್ಯತೆಯಾಗಬೇಕು. ಸರಕಾರ ಪರೀಕ್ಷೆಗಳ ಸುಳಿಯಿಂದ ಹೊರಬಂದು ಈ ನಿಟ್ಟಿನಲ್ಲಿ ಯೋಚಿಸಬೇಕೆಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.







