ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಿಎಂ ಸಂವಾದ: ಕೋವಿಡ್ 3ನೇ ಅಲೆಗೆ ಸಿದ್ಧತೆಗೆ ಯಡಿಯೂರಪ್ಪ ಸಲಹೆ

Photo: Twitter.com/CMofKarnataka
ಬೆಂಗಳೂರು, ಜೂ. 9: `ಕೋವಿಡ್-19 ಸೋಂಕಿನ ನಿಯಂತ್ರಣದಲ್ಲಿ ತಳಹಂತದಲ್ಲಿ ಅಂಗನವಾಡಿ ಕಾರ್ಯಕರ್ತೆಯರೂ, ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ. ಆರು ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ರಕ್ಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯವಾದುದು' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಅಂಗನವಾಡಿ ಕಾರ್ಯಕರ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬುಧವಾರ ಸಿಎಂ ಗ್ರಹ ಕಚೇರಿ ಕೃಷ್ಣಾದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ವಿಡಿಯೊ ಸಂವಾದದಲ್ಲಿ ಮಾತನಾಡಿದ ಯಡಿಯೂರಪ್ಪ, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯನಿರ್ವಹಣೆ, ಸಮಸ್ಯೆಗಳು, ಸವಾಲುಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು. ಮೂರನೆ ಅಲೆಯಲ್ಲಿ ಕೋವಿಡ್-19 ಸೋಂಕು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆಯಲ್ಲಿ ನಿಮ್ಮ ಪಾತ್ರ ಅತಿ ಮುಖ್ಯವಾದುದು ಎಂದು ಸಲಹೆ ಮಾಡಿದರು.
ಅಪೌಷ್ಟಿಕ ಮಕ್ಕಳು, ಅನಾರೋಗ್ಯ ಪೀಡಿತ ಮಕ್ಕಳನ್ನು ಗುರುತಿಸಿ, ಅವರ ಆರೊಗ್ಯ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಈ ದಿಸೆಯಲ್ಲಿ ಆರೋಗ್ಯ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಸೋಂಕು ನಿಯಂತ್ರಣಕ್ಕೆ ಆಸ್ಥೆಯಿಂದ ಶ್ರಮಿಸಬೇಕು. ಕೋವಿಡ್-19ರ ಸಂದರ್ಭದಲ್ಲಿ ಮನೆ-ಮನೆ ಭೇಟಿ ನೀಡಿ ಅರಿವು ಮೂಡಿಸುವುದು, ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ನಲ್ಲಿ ಕಾರ್ಯನಿರ್ವಹಣೆ ಜೊತೆಗೆ ಅಂಗನವಾಡಿಗಳು ಮುಚ್ಚಿದ ಕಾರಣ ಫಲಾನುಭವಿ ಮಕ್ಕಳು, ಬಾಣಂತಿಯರು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಮನೆಗೆ ತಲುಪಿಸುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆಂದು ಶ್ಲಾಘಿಸಿದರು.
ರಾಜ್ಯದಲ್ಲಿ ಶೇ.85.91ರಷ್ಟು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು ಲಸಿಕೆ ಪಡೆದಿರುವ ಕುರಿತು ಸಂತಸ ವ್ಯಕ್ತಪಡಿಸಿದ ಯಡಿಯೂರಪ್ಪ, ಅಂಗನವಾಡಿ ಕಾರ್ಯಕರ್ತೆಯರನ್ನು ಕೊರೋನ ವಾರಿಯರ್ಸ್ ಎಂದು ಘೋಷಿಸಲಾಗಿದ್ದು, ಕೋವಿಡ್ ನಿಂದ ಮೃತಪಟ್ಟ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಮೊದಲ ಅಲೆಯ ಸಂದರ್ಭದಲ್ಲಿ ಒಟ್ಟು 20 ಜನ ಕಾಯಕರ್ತೆಯರು/ಸಹಾಯಕಿಯರು ಮೃತಪಟ್ಟಿದ್ದು, ಅವರಿಗೆ ತಲಾ 30 ಲಕ್ಷ ರೂ.ಪರಿಹಾರ ವಿತರಿಸಲಾಗಿದೆ. ಎರಡನೆ ಅಲೆಯ ಸಂದರ್ಭದಲ್ಲಿ ವಿವಿಧ ವರ್ಗಗಳಿಗೆ ಪರಿಹಾರದ ಪ್ಯಾಕೇಜನ್ನು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೂ ತಲಾ 2ಸಾವಿರ ರೂ.ಪರಿಹಾರ ಘೋಷಿಸಲಾಗಿದೆ ಎಂದರು.
ಈ ವೇಳೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಮಟ್ಟದ ಟಾಸ್ಕ್ ಫೋರ್ಸ್ಗಳಲ್ಲಿ ತಾವು ನಿರ್ವಹಿಸುತ್ತಿರುವ ಕರ್ತವ್ಯ, ಮನೆ-ಮನೆ ಭೇಟಿ ನೀಡಿ ಅರಿವು ಮೂಡಿಸುವುದು, ಸೋಂಕಿತರ ಸಂಪರ್ಕಿತರನ್ನು ಗುರುತಿಸಿ ವರದಿ ಮಾಡುವುದು, ವಿಶೇಷಚೇತನರಿಗೆ ಲಸಿಕೆ ಒದಗಿಸುವುದು ಜೊತೆಗೆ ತಮ್ಮ ಇಲಾಖೆಯ ಕರ್ತವ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಮೂರನೆ ಅಲೆಗೆ ಸಿದ್ಧತೆಯಾಗಿ ತಾಯಂದಿರಿಗೆ ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯ ಮಂಜುಳಾ ಸಂಗಮೇಶ್ ಗೆ 'ಬೆಂಗಳೂರಿಗೆ ಬಂದಿದ್ದೀರಾ ಎಂದು ಸಿಎಂ ಪ್ರಶ್ನಿಸಿದಾಗ, ಮಂಜುಳಾ ಇಲ್ಲ ಎಂದಿದ್ದು, 'ಬೆಂಗಳೂರಿಗೆ ಬಂದಾಗ ನಮ್ಮ ಮನೆಗೆ ಬಂದು ಕಾಫಿ ಕುಡಿದು ಹೋಗಿ' ಎಂದು ಸಿಎಂ ಆಹ್ವಾನಿಸಿದರು. ಉತ್ತರ ಕನ್ನಡದ ಬ್ರಿಜಿಟ್ ಬ್ರಗಾಂಝಾ ಅವರು 'ತಮ್ಮ ವ್ಯಾಪ್ತಿಯ ಗರ್ಭಿಣಿಯರ ಆರೋಗ್ಯ ಕುರಿತು ನಿಗಾ ವಹಿಸಿದ್ದು, ಏರುಪೇರಾದರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ' ಎಂದು ವಿವರಿಸಿದರು.
ಕೋಲಾರ ಜಿಲ್ಲೆಯ ಸಾವಿತ್ರಮ್ಮ 'ಮೂವತ್ತು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಜನರಿಗೆ ಭಯವಿತ್ತು. ಕ್ವಾರಂಟೈನ್ ನಿಯಮಗಳನ್ನು ಪಾಲಿಸುತ್ತಿದ್ದರು. ಎರಡನೆ ಅಲೆ ಸಂದರ್ಭದಲ್ಲಿ ಸಾವು-ನೋವು ಹೆಚ್ಚಾಗಿ ಸಂಭವಿಸಿದರೂ, ಜನರಲ್ಲಿ ಹಿಂದಿನ ಭೀತಿ, ನಿಯಮ ಪಾಲನೆಯ ಕಾಳಜಿ ಇಲ್ಲ' ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ನಿಯಮ ಪಾಲಿಸುವಂತೆ ಜನರ ಮನವೊಲಿಸಬೇಕೆಂದು ಸಲಹೆ ನೀಡಿದರು.
ತಮ್ಮ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆ ಇಲ್ಲ. ಟಾಸ್ಕ್ ಫೋರ್ಸ್ ಸದಸ್ಯರಾಗಿ ಮನೆ-ಮನೆ ಭೇಟಿ ನೀಡಿ, ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಾಬ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಲಾಗುತ್ತಿದೆ. ವಿಶೇಷ ಶಿಬಿರ ನಡೆಸಿ, ವಿಶೇಷ ಚೇತನರೂ ಸೇರಿದಂತೆ 150ಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಶೇ.ನೂರರಷ್ಟು ಪ್ರಯತ್ನ ಪಟ್ಟು ಕೆಲಸಮಾಡುತ್ತಿರುವೆ'
-ಲೀಲಾವತಿ, ದೇವನಹಳ್ಳಿ, ಅಂಗನವಾಡಿ ಕಾರ್ಯಕರ್ತೆಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾಗ ಮನೆ ಮನೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು ವಿತರಿಸುವುದು ಕಷ್ಟವಾಗುತ್ತಿದೆ. ತಮ್ಮ ಇಲಾಖೆಯ ಕರ್ತವ್ಯಗಳೊಂದಿಗೆ ಇತರ ಇಲಾಖೆಗಳ ಸಮೀಕ್ಷೆ ಮತ್ತಿತರ ಕೆಲಸಗಳ ಒತ್ತಡ ಹೆಚ್ಚುತ್ತಿದೆ. ಈ ಒತ್ತಡ ನಿವಾರಿಸಬೇಕು.
-ಸುಮಲತಾ, ಉಡುಪಿ ಜಿಲ್ಲೆ







