ಉಡುಪಿ: 107 ಮಂದಿಗೆ ಕೊರೋನ ಸೋಂಕು, ಕೋವಿಡ್ ಗೆ ಓರ್ವ ಮಹಿಳೆ ಬಲಿ

ಉಡುಪಿ, ಜೂ.15: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದವರ ಸಂಖ್ಯೆ ಇಂದು 107ಕ್ಕೆ ಇಳಿದಿದೆ. ದಿನದಲ್ಲಿ ಕೋವಿಡ್ನಿಂದ 94ರ ವರ್ಷ ಪ್ರಾಯದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 306 ಮಂದಿ ಚಿಕಿತ್ಸೆಯಿಂದ ಗುಣಮುಖ ರಾಗಿದ್ದು, ಸದ್ಯ 2683 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಮೃತಪಟ್ಟ 94ರ ವೃದ್ಧೆ ಕುಂದಾಪುರ ತಾಲೂಕಿನವರು. ಇವರು ಕೋವಿಡ್ ಗುಣಲಕ್ಷಣದೊಂದಿಗೆ ತೀವ್ರವಾದ ಉಸಿರಾಟ ತೊಂದರೆ, ರಕ್ತದೊತ್ತಡ ಹಾಗೂ ನ್ಯುಮೋನಿಯಾದೊಂದಿಗೆ ಜೂ.6ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 363ಕ್ಕೇರಿದೆ.
ಇಂದು ಪಾಸಿಟಿವ್ ಬಂದ 107 ಮಂದಿಯಲ್ಲಿ 51 ಮಂದಿ ಪುರುಷರು ಹಾಗೂ 56 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 50, ಕುಂದಾಪುರ ತಾಲೂಕಿನ 39 ಹಾಗೂ ಕಾರ್ಕಳ ತಾಲೂಕಿನ 17 ಮಂದಿ ಇದ್ದು, ಉಳಿದೊಬ್ಬರು ಹೊರಜಿಲ್ಲೆಯವರು. ಇವರಲ್ಲಿ 10 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 97 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ನಿನ್ನೆ ಒಟ್ಟು 306 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 61,461ಕ್ಕೇರಿದೆ. ಸೋಮವಾರ ಜಿಲ್ಲೆಯಲ್ಲಿ 2096 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿ ಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 64,507 ಆಗಿದೆ ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,39,678 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಹಾವೇರಿ ಮಹಿಳೆಯಲ್ಲಿ ಕಪ್ಪು ಶಿಲೀಂದ್ರ ಸೋಂಕು
ಮಂಗಳವಾರ ಹಾವೇರಿಯ 47ರ ಹರೆಯದ ಮಹಿಳೆಯೊಬ್ಬರು ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಸೋಂಕಿಗಾಗಿ ಚಿಕಿತ್ಸೆ ಪಡೆದ ವ್ಯಕ್ತಿಯೊಬ್ಬರು ಇದೀಗ ಗುಣಮುಖರಾಗಿ ಇಂದು ಆ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.
ಇದೀಗ ಜಿಲ್ಲಾಸ್ಪತ್ರೆಯಲ್ಲಿ ಮೂವರು ಹಾಗೂ ಮಣಿಪಾಲ ಕೆಎಂಸಿಯಲ್ಲಿ ನಾಲ್ವರು ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ. ಒಟ್ಟು 16 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.
ದಿನದಲ್ಲಿ 6043 ಮಂದಿಗೆ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 6043 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಇವರಲ್ಲಿ 5286 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 757 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 3135 ಮಂದಿ ಮೊದಲ ಡೋಸ್ನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 2088 ಮಂದಿ ಮೊದಲ ಡೋಸ್ ಹಾಗೂ 693 ಮಂದಿ ಎರಡನೇ ಡೋಸ್ನ್ನು ಪಡೆದಿದ್ದಾರೆ. 60 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 67 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 3,16,485 ಮಂದಿ ಲಸಿಕೆಯ ಮೊದಲ ಡೋಸ್ನ್ನು ಪಡೆದರೆ, 92,449 ಮಂದಿ ಎರಡನೇ ಡೋಸ್ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.







