ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ಹಿಂಜರಿಯುವುದಿಲ್ಲ: ಅರುಣ್ ಸಿಂಗ್ ಎಚ್ಚರಿಕೆ
ಬೆಂಗಳೂರು, ಜೂ. 17: `ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಯಾವುದೇ ರೀತಿಯಲ್ಲಿಯೂ ಹಿಂಜರಿಯುವುದಿಲ್ಲ' ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ತನ್ನ ಭೇಟಿಗೆ ಕಾಲಾವಕಾಶ ಕೋರಿದ್ದ 50 ಮಂದಿ ಶಾಸಕರ ಜತೆ ಚರ್ಚಿಸಿದ್ದೇನೆ. ಶಾಸಕರು ಯಾವ ರೀತಿ ಕಾರ್ಯನಿರ್ವಹಿಸಿದ್ದಾರೆಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಲ್ಲದೆ, ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿರುವ ಸಂಬಂಧ ವಿವರಗಳನ್ನು ನೀಡಿದ್ದಾರೆ. ಶಾಸಕರಿಗೆ ಎಲ್ಲ ಸಚಿವರ ಜೊತೆ ಸಮಾಲೋಚಿಸಲು ಅವಕಾಶ ಕಲ್ಪಿಸಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಕೆಲ ಸದಸ್ಯರು ಪಕ್ಷದ ವರ್ಚಸ್ಸು ಕಡಿಮೆಯಾಗುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅಂತವರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಇತರೆ ನಾಯಕರು ನಿಗಾ ವಹಿಸಿದ್ದಾರೆ. ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸಮಾಲೋಚಿಸಿದ್ದಾರೆ. ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿರುವ ಕೆಲ ನಾಯಕರು, ತಳಮಟ್ಟದಿಂದ ಕಾರ್ಯನಿರ್ವಹಿಸಿದ ಕಾರ್ಯಕರ್ತರಿಗೆ ಅಪಮಾನ ಮಾಡುತ್ತಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.