ಭಟ್ಕಳ: ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ವೆಲ್ಫೇರ್ ಪಾರ್ಟಿಯಿಂದ ಪ್ರತಿಭಟನೆ

ಭಟ್ಕಳ: ತೈಲ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಂ ಕಾನ್, ಪ್ರಧಾನಿ ನರೇಂದ್ರ ಮೋದಿಯವರು ಜನರನ್ನ ಮೂರ್ಖರನ್ನಾಗಿಸಿದ್ದಾರೆ. ಸಬ್ಕಾ ವಿಕಾಸ್ ಹೆಸರಲ್ಲಿ ಯಾರ ವಿಕಾಸ ಮಾಡಲು ಹೊರಟಿದ್ದಾರೆಂಬುದು ತಿಳಿಯುತ್ತಿಲ್ಲ. ಈಗಾಗಲೇ, ದಿನನಿತ್ಯದ ಗೃಹ ಬಳಕೆ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯಿಂದಾಗಿ ಬಡಜನರ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ ಎಂದು ಆರೋಪಿಸಿದರು.
ಈ ಕುರಿತಂತೆ ಬುಧವಾರ ಭಟ್ಕಳದ ಶಮ್ಸುದ್ದೀನ್ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್ ಎದುರು ಜಿಲ್ಲಾಧ್ಯಕ್ಷ ಡಾ.ನಸೀಂ ಖಾನ್ ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಪೆಟ್ರೋಲ್ ಡಿಸೆಲ್ ಬೆಲೆ ಇಳಿಸುವಂತೆ ಆಗ್ರಹಿಸಿದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶೌಕತ್ ಖತೀಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಆಸಿಫ್ ಶೇಖ್, ಖಜಾಂಚಿ ಅಬ್ದುಲ್ ಜಬ್ಬಾರ್ ಅಸದಿ ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.







