ಆತೂರು: ವಾಹನ ತಪಾಸಣೆ ವೇಳೆ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನ ಸವಾರ ಅಪಘಾತಕ್ಕೀಡಾಗಿ ಮೃತ್ಯು
![ಆತೂರು: ವಾಹನ ತಪಾಸಣೆ ವೇಳೆ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನ ಸವಾರ ಅಪಘಾತಕ್ಕೀಡಾಗಿ ಮೃತ್ಯು ಆತೂರು: ವಾಹನ ತಪಾಸಣೆ ವೇಳೆ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನ ಸವಾರ ಅಪಘಾತಕ್ಕೀಡಾಗಿ ಮೃತ್ಯು](https://www.varthabharati.in/sites/default/files/images/articles/2021/06/29/296709-1624956689.gif)
ಕಡಬ, ಜೂ.29: ರಸ್ತೆ ದಾಟುತ್ತಿದ್ದ ವೇಳೆ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರ ನಡೆದಿರುವುದು ವರದಿಯಾಗಿದೆ.
ಆತೂರು ಬೈಲು ನಿವಾಸಿ ಹಾರಿಸ್(33) ಮೃತಪಟ್ಟವರು. ಅವರಿಂದು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅವರ ವಾಹನವನ್ನು ತಡೆದಿದ್ದಾರೆ. ಈ ವೇಳೆ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ದಾಖಲೆ ಪತ್ರಗಳನ್ನು ತೆಗೆದುಕೊಂಡು ವಿರುದ್ಧ ದಿಕ್ಕಿನಲ್ಲಿದ್ದ ಪೊಲೀಸರತ್ತ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಅವರಿಗೆ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಹಾರಿಸ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಉದ್ರಿಕ್ತ ಜನರನ್ನು ಸಮಾಧಾನಿಸಿದರು.
![](https://www.varthabharati.in/sites/default/files/images/galllery/2021/06/29/kdb1.gif)