ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 82 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಜೂ.29: ಜಿಲ್ಲೆಯಲ್ಲಿ ಮಂಗಳವಾರ ಕೊರೋನದಿಂದ ಯಾರೂ ಮೃತಪಟ್ಟಿರುವ ಬಗ್ಗೆ ವರದಿಯಾಗಿಲ್ಲ. ಆದರೆ 82 ಮಂದಿಯಲ್ಲಿ ಹೊಸದಾಗಿ ಕೊರೋನ ಸೋಂಕು ಪತ್ತೆಯಾಗಿದೆ. 98 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 879ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಜೂ.3ರ ಬಳಿಕ ಇದೇ ಮೊದಲ ಸಲ ದಿನದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಈವರೆಗೆ ಬಲಿಯಾದವರ ಸಂಖ್ಯೆ 393 ಆಗಿದೆ.
ಇಂದು ಪಾಸಿಟಿವ್ ಬಂದ 82 ಮಂದಿಯಲ್ಲಿ 44 ಮಂದಿ ಪುರುಷರು ಹಾಗೂ 38 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 38, ಕುಂದಾಪುರ ತಾಲೂಕಿನ 14 ಹಾಗೂ ಕಾರ್ಕಳ ತಾಲೂಕಿನ 28 ಮಂದಿಯೊಂದಿಗೆ ಹೊರ ಜಿಲ್ಲೆಗಳ ಇಬ್ಬರು ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 12 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 70 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಸೋಮವಾರ 98 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 65,018ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2405 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 66,290 ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,80,856 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಇಂದು ಜಿಲ್ಲೆಯಲ್ಲಿ ಯಾರಲ್ಲೂ ಹೊಸದಾಗಿ ಕಪ್ಪು ಶಿಲೀಂದ್ರ ಸೋಂಕು ಕಂಡುಬಂದಿಲ್ಲ. ಜಿಲ್ಲೆಯಲ್ಲೀಗ ಒಟ್ಟು ನಾಲ್ವರು ಸೋಂಕಿಗೆ ಚಿಕಿತ್ಸೆಯಲ್ಲಿದ್ದು, ಇವರಲ್ಲಿ ಮೂವರು ಕೆಎಂಸಿ ಹಾಗೂ ಒಬ್ಬರು ಉಡುಪಿಯ ಆದರ್ಶ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
11,761 ಮಂದಿಗೆ ಕೋವಿಡ್ ಲಸಿಕೆ
ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 11,761 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಇವರಲ್ಲಿ 10,284 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 1477 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 9195 ಮಂದಿ ಮೊದಲ ಡೋಸ್ನ್ನು ಹಾಗೂ 158 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 1089 ಮಂದಿ ಮೊದಲ ಡೋಸ್ ಹಾಗೂ 1313 ಮಂದಿ ಎರಡನೇ ಡೋಸ್ ನ್ನು ಪಡೆದಿದ್ದಾರೆ. ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ ನಾಲ್ವರು ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 4,12,669 ಮಂದಿ ಲಸಿಕೆಯ ಮೊದಲ ಡೋಸ್ನ್ನು ಪಡೆದರೆ, 1,12,942 ಮಂದಿ ಎರಡನೇ ಡೋಸ್ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.







