ಇನ್ನೆರಡು ದಿನಗಳಲ್ಲಿ ರಮೇಶ್ ಜಾರಕಿಹೊಳಿಯಿಂದ ಸುದ್ದಿಗೋಷ್ಠಿ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ, ಜು.1: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಇನ್ನೆರಡು ದಿನಗಳಲ್ಲಿ ಗೋಕಾಕ್ ನಗರಕ್ಕೆ ಆಗಮಿಸುತ್ತಿದ್ದು, ಅವರೊಂದಿಗೆ ಸಭೆ ನಡೆಸಿದ ಬಳಿಕ ಕೆಲವು ವಿಷಯಗಳನ್ನು ಸ್ಪಷ್ಟಪಡಿಸಲು ಸುದ್ದಿಗೋಷ್ಠಿಯನ್ನು ನಡೆಸಲಿದ್ದೇವೆ ಹಾಗೂ ನನಗೆ ಯಾರು ಕೂಡ ಸಚಿವ ಸ್ಥಾನದ ಆಫರ್ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಗುರುವಾರ ಗೋಕಾಕ್ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಹೊಸದಿಲ್ಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾಜಕಾರಣದಲ್ಲಿ ಅಸಮಾಧಾನ, ಬೇಜಾರು ಇದ್ದೇ ಇರುತ್ತದೆ. ಆದರೆ, ಅದರಿಂದ ಯಾವುದೇ ಸಮಸ್ಯೆ ಆಗಿಲ್ಲ. ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿ ಆಗಬೇಕೆಂದು ನಮ್ಮೆಲ್ಲರ ಆಸೆಯಾಗಿದೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ಅವರನ್ನೇ ಸಚಿವರನ್ನಾಗಿ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ಆ ದಿನಕ್ಕಾಗಿ ನಾವು ಕೂಡ ಕಾಯುತ್ತಿದ್ದೇವೆ. ಅಲ್ಲದೆ, ಸದ್ಯ ನನ್ನ ಪಾಡಿಗೆ ನಾನು ಕೆಎಂಎಫ್ ಅಧ್ಯಕ್ಷನಾಗಿ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.





