ಶಾಲೆಗಳ ಅಭಿವೃದ್ಧಿಗೆ ಹಣ ಬಳಸಲು ಕ್ರಿಯಾ ಯೋಜನೆ ಸಲ್ಲಿಸಿ: ಹೈಕೋರ್ಟ್

ಬೆಂಗಳೂರು, ಜು.2: ರಾಜ್ಯಾದ್ಯಂತ ಸರಕಾರಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 2021-22ನೆ ಸಾಲಿನಲ್ಲಿ ಮೀಸಲಿಟ್ಟಿರುವ ನೂರು ಕೋಟಿ ರೂ. ಬಳಕೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ರಾಜ್ಯದ ಶಾಲೆಗಳ ಸ್ಥಿತಿಗತಿ ಹಾಗೂ ಮೂಲಸೌಕರ್ಯಗಳ ಸಂಬಂಧ ಆ್ಯಂಟಿ ಕರಪ್ಷನ್ ಕೌನ್ಸಿಲ್ ಆಫ್ ಇಂಡಿಯಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.
2020-21ನೆ ಸಾಲಿನಲ್ಲಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 88 ಕೋಟಿ ರೂ.ಅನುದಾನ ಮೀಸಲಿಡಲಾಗಿತ್ತು. 2021-22ನೆ ಸಾಲಿನಲ್ಲಿ ನೂರು ಕೋಟಿ ರೂ.ಮೀಸಲಿಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಶಾಲೆಗಳ ಸಮಗ್ರ ಅಭಿವೃದ್ಧಿ ಮಾಡಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.
Next Story





