ಪಕ್ಷ ತೊರೆದ 14 ಮಂದಿಯನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ‘ಪಕ್ಷ ಬಿಟ್ಟು ಹೋದ 14 ಮಂದಿ ಶಾಸಕರು ಮಾತ್ರವಲ್ಲ, ಯಾರು ಬೇಕಾದರೂ ಕಾಂಗ್ರೆಸ್ ಸೇರಲು ಅರ್ಜಿ ಹಾಕಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಆದರೆ, ‘ಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ನಾನು ವಿಧಾನಸಭೆಯಲ್ಲಿ ಹೇಳಿದ್ದೇನೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪತ್ರಿನಿಧಿಗಳ ಜೊತೆ ಮಾತನಾಡಿದ ಅವರು, ‘ಪಕ್ಷ ತೊರೆದ 14 ಮಂದಿಯನ್ನೂ ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಜೊತೆ ಮಾತನಾಡುತ್ತೇನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
‘ತಮ್ಮ ವಿರುದ್ಧ ಯಾವುದೇ ವಿಡಿಯೋ ಪ್ರಸಾರ ಮಾಡದಂತೆ ಕೇಂದ್ರ ಸಚಿವ ಸದಾನಂದಗೌಡ ನ್ಯಾಯಾಲಯದಿಂದ ತಡೆ ಆದೇಶ ತಂದಿದ್ದಾರೆ. ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಆಗಿದೆ ಅವರ ಸ್ಥಿತಿ. ಕುಂಬಳಕಾಯಿ ಕಳ್ಳ ಎಂದರೆ ಅವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
‘ಕೋವಿಡ್ ಲಸಿಕೆಯ ಎರಡನೇ ಡೋಸ್ಗಾಗಿ ರಾಜ್ಯದಲ್ಲಿ ಜನ ಪರದಾಡುತ್ತಿದ್ದಾರೆ. ಲಸಿಕೆ ನೀಡುವ ಕಾರ್ಯವನ್ನು ಸಮರ್ಪಕವಾಗಿ ನಡೆಸುವಲ್ಲಿ ಈ ಸರಕಾರ ವಿಫಲವಾಗಿದೆ. 18 ವರ್ಷ ಮೀರಿದವರಿಗೆ ಲಸಿಕೆ ನೀಡುವುದಾಗಿ ಸರಕಾರ ಹೇಳಿತ್ತು. ಆದರೆ, ಎಲ್ಲಿಯೂ ಲಸಿಕೆ ಸಿಗುತ್ತಿಲ್ಲ. ಲಸಿಕೆ ದಾಸ್ತಾನಿಲ್ಲ ಎಂದು ಬಿಬಿಎಂಪಿ ಆಯುಕ್ತರೇ ಹೇಳಿದ್ದಾರೆ.
ಆರೋಗ್ಯ ಸಚಿವರು ಮಾತ್ರ ನಮ್ಮಲ್ಲಿ ಸಮಸ್ಯೆಯೇ ಇಲ್ಲ ಎನ್ನುತ್ತಿದ್ದಾರೆ. ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿಲ್ಲ’ ಎಂದು ಸಿದ್ದರಾಮಯ್ಯ ದೂರಿದರು.







