ಕೆಎಟಿ ತೀರ್ಪು; ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಆಗ್ರಹ: ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ
![ಕೆಎಟಿ ತೀರ್ಪು; ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಆಗ್ರಹ: ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ ಕೆಎಟಿ ತೀರ್ಪು; ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಆಗ್ರಹ: ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ](https://www.varthabharati.in/sites/default/files/images/articles/2021/07/4/297480-1625416290.jpg)
ಮಂಗಳೂರು, ಜು.4: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದು ಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್-2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ.
ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಂಘ ಮುಂದಾಗಿದ್ದು, ದ.ಕ. ಜಿಲ್ಲೆಯಲ್ಲೂ ಉಸ್ತುವಾರಿ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ, ಈ ಬಗ್ಗೆ ಸಂತ್ರಸ್ತ ಶಿಕ್ಷಕರ ಅಹವಾಲವನ್ನು ಮಂಡಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಶಾಸಕರಾದ ಡಿ. ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಯು.ಟಿ. ಖಾದರ್ ಅವರಿಗೆ ಲಿಖಿತ ಮನವಿ ಸಲ್ಲಿಸಿ, ಸಮಸ್ಯೆಯನ್ನು ಮನವರಿಕೆ ಮಾಡಿಕೊಡಲಾಯಿತು.
ಸಂಘದ ಜಿಲ್ಲಾಧ್ಯಕ್ಷೆ ಶೆರ್ಲಿ ಸುಮಾಲಿನಿ ನೇತೃತ್ವದಲ್ಲಿ ಸಚಿವರು ಮತ್ತು ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಉಪಾಧ್ಯಕ್ಷೆ ಪ್ರತಿಭಾ, ಮಂಗಳೂರು ತಾಲೂಕು ಸಂಘದ ಅಧ್ಯಕ್ಷ ಪ್ರೇಮನಾಥ ಮರ್ಣೆ, ಸಂಘಟನಾ ಕಾರ್ಯದರ್ಶಿ ಗಣೇಶ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎಸ್.ಅಂಗಾರಗೂ ಮನವಿ: ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಅವರಿಗೂ ಸುಳ್ಯದಲ್ಲಿ ಮನವಿ ಸಲ್ಲಿಸಲಾಯಿತು. ಸುಳ್ಯ ತಾಲೂಕು ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಬಿ., ಪದಾಧಿಕಾರಿಗಳಾದ ಉನ್ನಿಕೃಷ್ಣನ್ ಹಾಗೂ ಹಿಂಬಡ್ತಿ ಎದುರಿಸುತ್ತಿರುವ ಶಿಕ್ಷಕರು ಸಚಿವ ಅಂಗಾರ ಅವರಿಗೆ ಮನವಿ ಸಲ್ಲಿಸಿದರು.