ಎಸೆಸೆಲ್ಸಿ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ: ಉಡುಪಿ ಡಿಸಿ ಎಚ್ಚರಿಕೆ
![ಎಸೆಸೆಲ್ಸಿ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ: ಉಡುಪಿ ಡಿಸಿ ಎಚ್ಚರಿಕೆ ಎಸೆಸೆಲ್ಸಿ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ: ಉಡುಪಿ ಡಿಸಿ ಎಚ್ಚರಿಕೆ](https://www.varthabharati.in/sites/default/files/images/articles/2021/07/7/297905-1625667923.jpg)
ಉಡುಪಿ, ಜು.7: ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಜು. 19 ಮತ್ತು 22ರಂದು ಎಸೆಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಗತ್ಯ ಸಿದ್ದತೆ ಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷೆ ಹಾಗೂ ಕೊರೋನಾ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆ ಯಲ್ಲಿ ಎಸೆಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಕೈಗೊಂಡಿರುವ ಸಿದ್ದತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಪರೀಕ್ಷಾ ಕೆಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಎಚ್ಚರಿಕೆ ವಹಿಸ ಬೇಕೆಂದು ಸೂಚಿಸಿದ ಜಿಲ್ಲಾಧಿಕಾರಿ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ವಿದ್ಯಾರ್ಥಿ ಗಳನ್ನು ಪರಿಶೀಲಿಸಬೇಕು. ಸುರಕ್ಷಿತ ಅಂತರ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಮಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರು.
ಹೆಚ್ಚುವರಿ ಕೊಠಡಿ ಮೀಸಲು
ರೋಗ ಲಕ್ಷಣಗಳಿರುವ ವಿದ್ಯಾರ್ಥಿಗಳು ಕಂಡುಬಂದಲ್ಲಿ ಕೂಡಲೇ ಅವರಿಗೆ ಪ್ರತ್ಯೆಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಪ್ರತೀ ಪರೀಕ್ಷಾ ಕೇಂದ್ರದಲ್ಲಿ 2 ಮೀಸಲು ಹೆಚ್ಚುವರಿ ಕೊಠಡಿಗಳನ್ನು ಸಿದ್ದಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೊರೋನ ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೆಂದ್ರ ಗಳಿಗೆ ಯಾವ ವಾಹನದಲ್ಲಿ ಬರುತ್ತಾರೆ ಎಂಬ ಮಾಹಿತಿಯನ್ನು ಆಯಾ ಶಾಲೆಯ ಮುಖ್ಯೋಪಧ್ಯಾಯರಿಂದ ಪಡೆಯಬೇಕು. ಯಾಮದೇ ವಿದ್ಯಾರ್ಥಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನದ ಅಗತ್ಯವಿದ್ದಲ್ಲಿ ಮುಂಚಿತವಾಗಿ ಮಾಹಿತಿ ನೀಡಬೇಕು. ಜಿಲ್ಲಾಡಳಿತ ಅವರಿಗೆ ಸೂಕ್ತ ವಾಹನ ವ್ಯವಸ್ಥೆ ಮಾಡಲಿದೆ ಎಂದರು.
ಸೂಕ್ತ ಪೊಲೀಸ್ ಭದ್ರತೆ
ವಿದ್ಯಾರ್ಥಿಗಳ ಆರೋಗ್ಯ ಬಹಳಷ್ಟು ಮುಖ್ಯವಾಗಿರುವುದರಿಂದ ಮೊದಲು ಶಿಕ್ಷಕರು ಮಾಸ್ಕ್ ಧರಿಸಿ ಮಾದರಿಯಾಗಬೇಕು. ಲಸಿಕೆ ಪಡೆಯದ ಶಿಕ್ಷಕರು ಕೂಡಲೇ ಲಸಿಕೆಯನ್ನು ಪಡೆಯುವ ಕೆಲಸ ಮಾಡಬೆೀಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪ್ರಶ್ನೆ ಪತ್ರಿಕಾ ಸಾಗಾಟ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆಯನ್ನು ಪೊಲೀಸ್ ಇಲಾಖೆ ಒದಗಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಅಗತ್ಯವಿದ್ದಲ್ಲಿ ಸೂಕ್ತ ವಾಹನ ವ್ಯವಸ್ಥೆಯನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಲ್ಪಿಸಬೇಕು ಎಂದು ಅವರು ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತ ನಾಡಿ, ಈಗಾಗಲೇ ಗುರುತಿಸಲಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು. ಮಳೆಗಾಲ ಆಗಿರುವುದರಿಂದ ಕಟ್ಟಡಗಳು ಸೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರ ದಿಂದ ಎಲ್ಲಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಎಸ್ಪಿಕುಮಾರ ಚಂದ್ರ, ಡಿಡಿಪಿಐ ಎನ್.ಎಚ್. ನಾಗೂರ, ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ, ಡಯಟ್ ಪ್ರಾಂಶುಪಾಲ ವೇದಮೂರ್ತಿ, ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳ ಅಧೀಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.
ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 7597 ಬಾಲಕರು, 6787 ಬಾಲಕಿಯರು ಸೇರಿದಂತೆ ಒಟ್ಟು 14384 ವಿದ್ಯಾರ್ಥಿಗಳು ಹಾಜರಾಗಲಿದ್ದು, ಇದಕ್ಕಾಗಿ 88 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಡಿಡಿಪಿಐ ಎನ್.ಎಚ್. ನಾಗೂರ ತಿಳಿಸಿದರು.
ಒಟ್ಟು ಮುಖ್ಯ ಅಧೀಕ್ಷಕರು, ಪ್ರಶ್ನಾ ಪತ್ರಿಕೆ ಪಾಲಕರು, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿದಂತೆ ಒಟ್ಟು 2266 ಸಿಬ್ಬಂದಿಗಳನ್ನು ವಿವಿಧ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಈ ಎಲ್ಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅವರು ಹೇಳಿದರು.