ಎಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ದ.ಕ.ಜಿಪಂ ಸಿಇಒ ಸೂಚನೆ
ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಸಭೆ
![ಎಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ದ.ಕ.ಜಿಪಂ ಸಿಇಒ ಸೂಚನೆ ಎಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ದ.ಕ.ಜಿಪಂ ಸಿಇಒ ಸೂಚನೆ](https://www.varthabharati.in/sites/default/files/images/articles/2021/07/7/297974-1625680651.jpg)
ಮಂಗಳೂರು, ಜು.7: ಜಿಲ್ಲೆಯಲ್ಲಿ ಜು.19 ಮತ್ತು 22 ರಂದು ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶವಿರದಂತೆ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಪಂ ಸಿಇಒ ಡಾ.ಕುಮಾರ್ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಎಸೆಸೆಲ್ಸಿ ಪರೀಕ್ಷೆಗಳ ಸಿದ್ದತೆಗಳ ಕುರಿತು ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರೊಂದಿಗೆ ನಗರದ ಲೇಡಿಹಿಲ್ನ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಪರೀಕ್ಷೆಗಳನ್ನು ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಎಚ್ಚರಿಕೆಯಿಂದ ನಿರ್ವಹಿಸಬೇಕಿದೆ. ಆದ ಕಾರಣ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ ವರ್ಗ, ಮೇಲ್ವಿಚಾರಕರು ಮಾಸ್ಕ್ ಧರಿಸಬೇಕು, ಪರೀಕ್ಷೆಯಲ್ಲಿ ಪರಸ್ಪರ ಸುರಕ್ಷಿತ ಅಂತರ ಕಾಯ್ದುಕೊಳ್ಳಲಾಗುತ್ತಿದ್ದು, ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಿಸಬೇಕು ಹಾಗೂ ಅಗತ್ಯ ಮೇಜು, ಕುರ್ಚಿಗಳನ್ನು ಹಾಕಿಸಬೇಕು ಎಂದರು.
ಈ ಬಾರಿಯ ಪರೀಕ್ಷೆಯು ಭಿನ್ನವಾಗಿದೆ. ಒಎಂಆರ್ ಶೀಟ್ಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷಾ ಸಿದ್ಧತೆ ಮತ್ತು ಪೂರ್ವ ತಯಾರಿಗಳ ಬಗ್ಗೆ ಆನ್ಲೈನ್ ತರಗತಿಯ ಮೂಲಕ ತಿಳಿಸಿಕೊಡುವ ಕೆಲಸವನ್ನು ಆಯಾ ಶಾಲೆಯ ಶಿಕ್ಷಕರು ಮಾಡಬೇಕು. ಪರೀಕ್ಷೆಯ ಹಿಂದಿನ ದಿನವೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸರ್ ಮಾಡಬೇಕು ಮತ್ತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನಿಂಗ್ಗೆ ಒಳಪಡಿಸಬೇಕು, ಪರೀಕ್ಷಾ ಕೇಂದ್ರಗಳನ್ನು ಬೆಳಗ್ಗೆ 8 ಗಂಟೆಗೆ ತೆರೆಯಬೇಕು. ಒಂದು ವೇಳೆ ಪರೀಕ್ಷಾರ್ಥಿಯು ಕೋವಿಡ್-19 ಸೋಂಕು ಹೊಂದಿ ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ, ಅಂತಹ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸಿಕೊಡಬೇಕು ಎಂದು ಕುಮಾರ್ ಸೂಚಿಸಿದರು.
ಸಭೆಯಲ್ಲಿ ಡಿಡಿಪಿಐ ಮಲ್ಲೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜಾ, ದೈಹಿಕ ಶಿಕ್ಷಣ ಅಧಿಕಾರಿ ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು.