ಗರ್ಭಪೂರ್ವ, ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಡಾ. ಪ್ರತಾಪ್ ಕುಮಾರ್
![ಗರ್ಭಪೂರ್ವ, ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಡಾ. ಪ್ರತಾಪ್ ಕುಮಾರ್ ಗರ್ಭಪೂರ್ವ, ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಡಾ. ಪ್ರತಾಪ್ ಕುಮಾರ್](https://www.varthabharati.in/sites/default/files/images/articles/2021/07/8/298047-1625755793.jpg)
ಉಡುಪಿ, ಜು.8: ಗರ್ಭಪೂರ್ವ ಮತ್ತು ಪ್ರಸವ ಪೂರ್ವಭ್ರೂಣ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನಿನ ಅಡಿಯಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಖ್ಯಾತ ಪ್ರಸೂತಿ ತಜ್ಞ ಹಾಗೂ ಜಿಲ್ಲಾ ಪಿಸಿ ಮತ್ತು ಪಿಎನ್ಡಿಟಿ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದ್ದಾರೆ.
ಗುರುವಾರ ಉಡುಪಿಯ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಸಲಹಾ ಸಮಿತಿ ಸಭೆಯ ಅ್ಯಕ್ಷತೆ ವಹಿಸಿ ಮಾತನಾಡುತಿದ್ದರು.
ಸಮಾಜದಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಸರಕಾರ ಕಾನೂನನ್ನು ಜಾರಿಗೆ ತಂದಿದೆ. ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಇದನ್ನು ಉಲ್ಲಂ ಸುವವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ ಪ್ರತಿ 1000 ಪುರುಷರಿಗೆ, 957 ಮಂದಿ ಹೆಣ್ಣು ಮಕ್ಕಳಿದ್ದಾರೆ ಎಂದ ಅವರು ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳುವುದು ಈ ಸಮಿತಿಯ ಜವಾಬ್ದಾರಿಯಾಗಿದೆ ಎಂದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳು ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳ ಬೇಕು, ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸರಕಾರದ ನಿಯಮಾನುಸಾರ ರಿಜಿಸ್ಟರ್ ಮತ್ತು ಮತ್ತಿತರ ದಾಖಲೆಗಳಲ್ಲಿ ನೋಂದಾಯಿಸಬೇಕು ಎಂದರು.
ಭ್ರೂಣಲಿಂಗ ಪತ್ತೆಯಿಂದ ಸಮಾಜದಲ್ಲಿ ಆಗುವ ತೊಂದರೆಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡುವುದರೊಂದಿಗೆ ಗಂಡು ಮತ್ತು ಹೆಣ್ಣಿನ ಅನುಪಾತ ವನ್ನು ಸಮಾನವಾಗಿರುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್ ಕೆ ಮಾತನಾಡಿ, 18 ವರ್ಷದೊಳಗಿನ ಮಹಿಳೆಯರು ಸ್ಕ್ಯಾನಿಂಗ್ ಮಾಡಿಸಲು ಸ್ಕ್ಯಾನಿಂಗ್ ಕೇಂದ್ರ ಗಳಿಗೆ ಬಂದಾಗ ಅವರನ್ನು ಸಮೀಪದ ಸರಕಾರಿ ಆಸ್ಪತ್ರೆಗಳಿಗೆ ಹೋಗುವಂತೆ ತಿಳಿಸಬೇಕು. ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳು ವೈದ್ಯರ ಶಿಫಾರಸು ಪತ್ರದ ಆಧಾರದ ಮೇಲೆ ಸ್ಕ್ಯಾನಿಂಗ್ ಕಾರ್ಯವನ್ನು ಕೈಗೊಳ್ಳಬೇಕು. ಸ್ಕ್ಯಾನಿಂಗ್ನ ಶುಲ್ಕದ ವಿವರವನ್ನು ಸ್ಕ್ಯಾನಿಂಗ್ ಕೇಂದ್ರದ ಮುಂಭಾಗ ಪ್ರದರ್ಶಿಸಬೇಕು ಎಂದರು.
ಸ್ಕ್ಯಾನಿಂಗ್ ಕೇಂದ್ರಗಳ ಮಾಲಕರು ನಿಗದಿತ ಕಾಲಾವಧಿಯ ಒಳಗೆ ನವೀಕರಣ ಮಾಡಿಸಬೇಕು ಎಂದ ಅವರು, ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಬಳಕೆ ಮಾಡದೇ ಇರುವ ಹಳೆಯ ಸ್ಕ್ಯಾನಿಂಗ್ ಯಂತ್ರಗಳು ದುರ್ಬಳಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವುಗಳನ್ನು ಸರಕಾರದ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಮಕ್ಕಳ ತಜ್ಞ ಕಿರಣ್ ಹೆಬ್ಬಾರ್, ಡಾ. ಆಮ್ನಾ ಹೆಗ್ಡೆ, ಡಾ. ದೀಕ್ಷಿತ್, ಡಾ. ಅನಿತಾ ಪ್ರಭು, ಸಮಾಜ ಸೇವಕರಾದ ಡಾ. ಗಣೇಶ್ ಪೈ ಮತ್ತು ಸರಿತಾ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.