ಎಸೆಸೆಲ್ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಜು.12: ಪಿಯುಸಿ ಪರೀಕ್ಷೆ ರದ್ದುಗೊಳಿಸಿರುವ ರೀತಿಯಲ್ಲೇ ಎಸೆಸೆಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.
ಈ ಕುರಿತು ನಗರದ ಜ್ಞಾನಮಂದಿರ ಟ್ರಸ್ಟ್ ಎಸ್.ವಿ.ಸಿಂಗ್ರೇಗೌಡ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ನ್ಯಾ.ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಈ ವೇಳೆ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ಎಸೆಸೆಲ್ಸಿ ಪರೀಕ್ಷೆಗಳನ್ನು ಜುಲೈ 19 ಹಾಗೂ 20ರಂದು ದಿನಕ್ಕೆ ಮೂರು ಸಬ್ಜೆಕ್ಟ್ ಗಳಂತೆ 2 ದಿನಗಳ ಕಾಲ ನಡೆಸಲು ವೇಳಾ ಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆಗಳನ್ನು ನಡೆಸಲು ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜತೆಗೆ ಕೋವಿಡ್ ಸೋಂಕು ಕೂಡ ಇಳಿಮುಖ ವಾಗಿದ್ದು, ಪರೀಕ್ಷೆ ನಡೆಸಲು ಯಾವುದೇ ಸಮಸ್ಯೆಗಳಿಲ್ಲ ಎಂದು ವಿವರಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ಕೊರೋನ ಸೋಂಕು ಇಳಿಮುಖವಾಗುತ್ತಿರುವುದು ಕಂಡು ಬಂದಿದೆ. ಹೀಗಾಗಿ, ವಿದ್ಯಾರ್ಥಿಗಳ ಪರೀಕ್ಷೆ ಬರೆಯಲು ಸಮಸ್ಯೆಯಾಗದು. ಹೀಗಾಗಿ, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಲಾಗದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿತು.
ಅರ್ಜಿಯಲ್ಲಿ ಏನಿದೆ: ಎಸೆಸೆಲ್ಸಿ ಪರೀಕ್ಷೆ ನಡೆಸಲು ಕಳೆದ ಫೆ.5ರಂದು ನೋಟಿಫಿಕೇಷನ್ ಹೊರಡಿಸಿದ್ದು, ಜುಲೈ 19ರಿಂದ 22ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಜೂನ್ 28ರಂದು ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಲಾಗಿದೆ. ಆದರೆ, ಪರೀಕ್ಷೆ ನಡೆಸುವುದನ್ನು ಆಕ್ಷೇಪಿಸಿದ್ದ ಅರ್ಜಿದಾರರು, ಕೋವಿಡ್ ಕಾರಣಕ್ಕಾಗಿ ಕಳೆದ ವರ್ಷ ಸರಿಯಾಗಿ ತರಗತಿಗಳೇ ನಡೆದಿಲ್ಲ. ಅದರಲ್ಲೂ ಇಂಟರ್ನೆಟ್, ಸ್ಮಾರ್ಟ್ ಫೋನ್ ಇಲ್ಲದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್ಲೈನ್ ಮೂಲಕವೂ ಪಾಠ ಕೇಳಲು ಸಾಧ್ಯವಾಗಿಲ್ಲ.
ಕೋವಿಡ್ ಒಂದು ಮತ್ತು ಎರಡನೆ ಅಲೆಯಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಕೋವಿಡ್ 3ನೆ ಅಲೆ ಎದುರಾಗುವ ಸಾಧ್ಯತೆ ಇದ್ದು ಮಕ್ಕಳಿಗೆ ಸೋಂಕು ತಗುಲುವ ಕುರಿತು ತಜ್ಞರು ಹೇಳಿದ್ದಾರೆ. ಪ್ರಸಕ್ತ ವರ್ಷ ರಿಪೀಟರ್ಸ್ ಸೇರಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಬೇಕಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸಿದರೆ ಮಕ್ಕಳು ಅಪಾಯಕ್ಕೆ ಸಿಲುಕಲಿದ್ದಾರೆ.
ಈಗಾಗಲೇ ಸಿಬಿಎಸ್ಸಿ 10 ಹಾಗೂ 12ನೆ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಕಾರಣಕ್ಕಾಗಿಯೇ ಪರೀಕ್ಷೆ ರದ್ದುಪಡಿಸಿದೆ. ರಾಜ್ಯದಲ್ಲಿಯೂ ಪಿಯು ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸದಂತೆ ಸರಕಾರ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು. ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿರುವ ನೋಟಿಫಿಕೇಷನ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.







