ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೊದಲ ಪ್ರಾಶಸ್ತ್ಯ : ಸಚಿವ ಡಾ. ಸುಧಾಕರ್
ಕಾರ್ಕಳ: ರಾಜ್ಯದಲ್ಲಿ ಸುಮಾರು 45 ಹೊಸ ತಾಲೂಕು ರಚನೆಯಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಬೇಡಿಕೆ ಇದೆ. ತಾಲೂಕು ಆಸ್ಪತ್ರೆ ರಚನೆಯಲ್ಲಿ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿ ಹೆಬ್ರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಸಚಿವ ಡಾ. ಕೆ ಸುಧಾಕರ್ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾದ ಆಕ್ಸಿಜನ್ ಘಟಕವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಶಾಸಕರ ವಿನೂತನ ವಾತ್ಸಲ್ಯ ಕಾರ್ಯಕ್ರಮವನ್ನು ರಾಜ್ಯದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಸುಧಾಕರ್ ಭರವಸೆ ನೀಡಿದರು.
ವೈದ್ಯಾಧಿಕಾರಿಗಳು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರ ಶ್ರಮ ಮತ್ತು ನಿಸ್ವಾರ್ಥ ಸೇವೆ ಇಂದು ಜನರಿಗೆ ಸರ್ಕಾರಿ ವ್ಯವಸ್ಥೆಗಳ ಮೇಲೆ ನಂಬಿಕೆ ಮೂಡಲು ಕಾರಣವಾಗಿದೆ. ಆದ್ದರಿಂದ ಎಲ್ಲರ ಸೇವೆ ಅಪಾರವಾದುದು ಎಂದು ಸಚಿವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸುನಿಲ್ ಕುಮಾರ್ ಮಾತನಾಡಿ ಹೆಬ್ರಿ ತಾಲೂಕು ಅಲ್ಪಾವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಹೆಜ್ಜೆಯನ್ನಿಟ್ಟಿದೆ. ಈ ಸಾಧನೆಗೆ ಕಾರಣವಾದ ಎಂಸಿಎಫ್ ಮತ್ತು ಹೆಬ್ರಿಯ ದಾನಿಗಳ ಸೇವೆಯನ್ನು ಸ್ಮರಿಸಿದರು. ಅಲ್ಲದೆ ಮೂರನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಹೇಳಿದರು.
ಕಾರ್ಕಳದಲ್ಲಿ ನರ್ಸಿಂಗ್ ಕಾಲೇಜಿಗೆ ಬೇಡಿಕೆ
ಶಾಸಕ ಸುನಿಲ್ ಕುಮಾರ್ ಆರೋಗ್ಯ ಸಚಿವರಲ್ಲಿ ಕಾರ್ಕಳದಲ್ಲಿ ನರ್ಸಿಂಗ್ ಕಾಲೇಜನ್ನು ನಿರ್ಮಾಣ ಮಾಡಲು ಬೇಡಿಕೆಯನ್ನು ಇಟ್ಟರು.
ಈ ಸಂದರ್ಭದಲ್ಲಿ ಎಂಸಿಎಫ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ್ ರಾವ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ ಜಗದೀಶ್, ಜಿಲ್ಲಾ ಆರೋಗ್ಯ ಅಧಿಕಾರಿ ನಾಗಭೂಷಣ ಉಡುಪ, ತಹಸೀಲ್ದಾರ್ ಪುರಂದರ ಕೆ,ಗೇರು ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಆರೋಗ್ಯ ಇಲಾಖೆ ನಿರ್ದೇಶಕ ಓಂಕಾರ್ ಪ್ರಕಾಶ್ ಪಾಟೀಲ್, ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ತಾಲೂಕು ವೈದ್ಯಾಧಿಕಾರಿ ಕೃಷ್ಣಾನಂದ ಶೆಟ್ಟಿ, ವೈದ್ಯಾಧಿಕಾರಿ ಸಂತೋಷ್ ಕುಮಾರ್, ಜಿಪಂ ನಿಕಟಪೂರ್ವ ಸದಸ್ಯೆ ಜ್ಯೋತಿ ಹರೀಶ್, ತಾ ಪಂ ನಿಕಟಪೂರ್ವ ಅಧ್ಯಕ್ಷ ರಮೇಶ್ ಪೂಜಾರಿ, ವಿವಿಧ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಂಸಿಎಫ್ ನ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ್ ರಾವ್, ದಾನಿಗಳ ಪರವಾಗಿ ಮೂನಿಯಲು ದಿನೇಶ್ ಪೈ, ವರಂಗ ಕೆಲ್ ಟೆಕ್ ಮತ್ತು ಕ್ಯಾಂಪ್ಕೋ ಸಂಸ್ಥೆಯನ್ನು ಗೌರವಿಸಲಾಯಿತು.