ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಶಾಸಕ ಎಸ್.ರಘು ವಿರುದ್ದ ಕ್ರಮಕ್ಕೆ ಆಗ್ರಹ
ಬಿಜೆಪಿ ಕಚೇರಿಗೆ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ನೀಡಿ ದಸಂಸ ವಿನೂತನ ಪ್ರತಿಭಟನೆ

ಬೆಂಗಳೂರು, ಜು. 14: ಇಲ್ಲಿನ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ರಘು ಅವರ ನಿರ್ದೇಶನದಂತೆ ಅವರ ಬೆಂಬಲಿಗರು ಇತ್ತೀಚೆಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ್ದನ್ನ, ಬಿಜೆಪಿ ಗಂಭಿರವಾಗಿ ಪರಿಗಣಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಸಂಸ ರಾಜ್ಯಾಧ್ಯಕ್ಷ ಡಾ.ಸಿ.ಎಸ್.ರಘು ರಾಜ್ಯ ಬಿಜೆಪಿ ಕಚೇರಿಯ ಮುಂದೆ ವಿನೂತನ ಪ್ರತಿಭಟನೆ ನಡೆಸಿದರು.
ಬುಧವಾರ ಇಲ್ಲಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ತೆರಳಿದ್ದ ದಸಂಸ ಅಧ್ಯಕ್ಷ ರಘು ನೇತೃತ್ವದ ತಂಡಕ್ಕೆ ಬಿಜೆಪಿ ಕಚೇರಿ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಕಚೇರಿಯ ಮುಂಭಾಗದಲ್ಲೇ ವಿನೂತನವಾಗಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗೆ ಸಿ.ವಿ.ರಾಮನ್ ನಗರ ಕ್ಷೇತ್ರದ ಶಾಸಕ ಎಸ್.ರಘು ಅವರ ಬೆಂಬಲಿಗರು ಇತ್ತೀಚೆಗೆ ಕ್ಷೇತ್ರದಲ್ಲಿ ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಿತ್ತುಹಾಕಿ ಅವಮಾನಿಸಿದ್ದರು ಎಂದು ದೂರಲಾಗಿದೆ.
ಶಾಸಕ ಎಸ್.ರಘು ಅವರು ಬಹಿರಂಗ ಕ್ಷಮೆ ಕೇಳಬೇಕು, ಅವರ ಕ್ಷೇತ್ರ ವ್ಯಾಪ್ತಿಯಲ್ಲಿನ ಒಂದು ಆಸ್ಪತ್ರೆಗೆ ಡಾ.ಬಿ.ಆರ್. ಅಂಬೇಡ್ಕರ್ ಹೆಸರನ್ನ ನಾಮಕರಣ ಮಾಡಬೇಕು ಮತ್ತು ಅಂಬೇಡ್ಕರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕು ಎಂದು ದಸಂಸ ರಾಜ್ಯಾಧ್ಯಕ್ಷ ರಘು ಆಗ್ರಹಿಸಿದ್ದಾರೆ.
ಈ ಘಟನೆ ನಡೆದು ವಾರಗಳೆ ಕಳೆದಿದೆ, ಆದರೆ, ಪೊಲೀಸ್ ಇಲಾಖೆಗೆ ಹಾಗೂ ಬಿಜೆಪಿ ಮುಖಂಡರುಗಳಿಗೆ ದೂರು ನೀಡಿದರೂ, ಶಾಸಕರ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಗಮನ ಸೆಳೆಯುವ ನಿಟ್ಟಿನಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿದ್ದೇವು.
ಆದರೆ, ನಮಗೆ ಕಚೇರಿಯ ಒಳಗೆ ಪ್ರವೇಶ ನೀಡದೇ ಇದ್ದ ಹಿನ್ನಲೆಯಲ್ಲಿ ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿಗೆ, ಅಂಬೇಡ್ಕರ್ ಅವರ ಭಾವಚಿತ್ರವನ್ನು ನೀಡುವ ಮೂಲಕ ವಿನೂತನವಾಗಿ ಮನವಿಯನ್ನು ಸಲ್ಲಿಸಿದ್ದೇವೆ ಎಂದು ಸಿ.ಎಸ್ ರಘು ತಿಳಿಸಿದರು.







