ಜಿಂದಾಲ್ ಕಂಪೆನಿಗೆ ಜಮೀನು ಪರಭಾರೆ: ಪ್ರಮಾಣ ಪತ್ರ ಸಲ್ಲಿಸದ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಜು.16: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಕಂಪೆನಿಗೆ 3,667 ಎಕರೆ ಸರಕಾರಿ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ನ್ಯಾಯಾಲಯದ ಮುಂದಿನ ಆದೇಶದವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸದ ರಾಜ್ಯ ಸರಕಾರದ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಜಿಂದಾಲ್ ಕಂಪೆನಿಗೆ ಕಡಿಮೆ ಬೆಲೆಯಲ್ಲಿ ಸರಕಾರಿ ಭೂಮಿ ಪರಭಾರೆ ಮಾಡುವ ಸರಕಾರದ ಕ್ರಮಕ್ಕೆ ಆಕ್ಷೇಪಿಸಿ ಬೆಂಗಳೂರಿನ ಕೆ.ಎ.ಪಾಲ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಶುಕ್ರವಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಈ ವೇಳೆ ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ಪ್ರಮಾಣ ಪತ್ರ ಸಲ್ಲಿಸದ ಸರಕಾರದ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿತು.ನ್ಯಾಯಾಲಯದ ಮುಂದಿನ ಆದೇಶದವರೆಗೆ ಭೂಮಿ ಪರಭಾರೆ ಮಾಡುವುದಿಲ್ಲ ಎಂಬ ಕುರಿತು ಸರಕಾರ ಈವರೆಗೆ ಪ್ರಮಾಣ ಪತ್ರ ಸಲ್ಲಿಸಿಲ್ಲ.
ಆದರೆ, ಇದೇ ವೇಳೆ ಖಾಸಗಿ ಸಂಸ್ಥೆಗೆ ನಿಲುವು ಸಮರ್ಥಿಸಿಕೊಳ್ಳಲು ಅವಕಾಶ ನೀಡಿದೆ. ಸರಕಾರದ ಇಂಥ ನಡವಳಿಕೆಯನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಭೂಮಿ ಪರಭಾರೆ ಮಾಡಿಕೊಡುವುದಿಲ್ಲ ಎಂಬ ಕುರಿತು ಸ್ಪಷ್ಟನೆ ನೀಡಬೇಕು ಎಂದು ತಾಕೀತು ಮಾಡಿ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ ಏನು: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಸುಮಾರು 3,667 ಎಕರೆ ಭೂಮಿಯನ್ನು ಸರಕಾರÀ ಜಿಂದಾಲ್ ಕಂಪೆನಿಗೆ ಪರಭಾರೆ ಮಾಡಿದೆ. 2019ರಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರ ಜಮೀನು ಪರಭಾರೆ ಮಾಡಲು ಮುಂದಾಗಿದ್ದಾಗ ವಿರೋಧ ಪಕ್ಷದಲ್ಲಿದ್ದ ಯಡಿಯೂರಪ್ಪ ನಿರ್ಧಾರವನ್ನು ವಿರೋಧಿಸಿದ್ದರು.
ಆದರೆ, ಇದೀಗ ಯಡಿಯೂರಪ್ಪ ಸರಕಾರವೇ ಖಾಸಗಿ ಕಂಪೆನಿಗೆ ಜಮೀನು ನೀಡಲು ಮುಂದಾಗಿದೆ ಎಂದು ಅಜಿರ್ದಾರರು ಆರೋಪಿಸಿದ್ದಾರೆ. ಅಲ್ಲದೆ, ಜಮೀನು ಪರಭಾರೆ ಕುರಿತು 2021ರ ಎಪ್ರಿಲ್ 26ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರ ರದ್ದುಪಡಿಸಬೇಕು. ಜಮೀನು ಪರಭಾರೆ ನಿರ್ಧಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ಸ್ವತಂತ್ರ ಸಂಸ್ಥೆಯೊಂದನ್ನು ನೇಮಿಸಬೇಕು. ಆ ಸಂಸ್ಥೆಯಿಂದ ವರದಿ ತರಿಸಿಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದಾರೆ.







