ಅನ್ಯ ಪಕ್ಷಗಳ ಲಿಂಗಾಯತ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ : ಡಿ.ಕೆ. ಶಿವಕುಮಾರ್

ಕಲಬುರ್ಗಿ : ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು.
'ಅನ್ಯ ಪಕ್ಷಗಳ ಬಹಳಷ್ಟು ಮಂದಿ ಲಿಂಗಾಯತ ಸಮುದಾಯದ ನಾಯಕರು, ಕಾರ್ಯಕರ್ತರು ನಮ್ಮ ಪಕ್ಷದತ್ತ ಮುಖ ಮಾಡಿದ್ದಾರೆ. ನಮ್ಮ ಪಕ್ಷ ದಲ್ಲಿ ಎಂ.ಬಿ ಪಾಟೀಲ್, ಎಸ್.ಆರ್. ಪಾಟೀಲ್, ಈಶ್ವರ್ ಖಂಡ್ರೆ ಅವರು ಸೇರಿದಂತೆ ಸಮುದಾಯದ ಅನೇಕ ನಾಯಕರು ಇದ್ದಾರೆ.
ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ಅವರ ಆಸ್ತಿ ಎಂದು ಭಾವಿಸಿದ್ದಾರೆ. ಆದರೆ ಅದು ಸತ್ಯ ಅಲ್ಲ. ನಮ್ಮಲ್ಲೂ ಲಿಂಗಾಯತ ಸಮುದಾಯದ ಶಾಸಕರು ಇದ್ದಾರೆ, ನಾಯಕತ್ವ ಗುಣ ಇರುವವರೂ ಇದ್ದಾರೆ. ಈ ಸಮುದಾಯದ ಅನೇಕ ನಾಯಕರು ನಮ್ಮ ಪಕ್ಷ ಸೇರಲು ಮುಂದೆ ಬಂದಿದ್ದಾರೆ. ಈಗಲೇ ಆ ಬಗ್ಗೆ ಹೆಚ್ಚಿನ ವಿವರ ನೀಡುವುದಿಲ್ಲ. ಅವರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರಿಸಿ ಕೊಳ್ಳುವಾಗ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.





