ಉಡುಪಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಲಾಭಾಂಶ ವಿತರಣೆ

ಉಡುಪಿ, ಜು.17: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ನ ಉಡುಪಿ ತಾಲೂಕು ಅಂಬಾಗಿಲು ವಲಯದ ಅಂಬಲಪಾಡಿ ಕಾರ್ಯಕ್ಷೇತ್ರದ ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಅಂಬಲಪಾಡಿಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಸೌಧ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ಮೊತ್ತದ ಚೆಕ್ ವಿತರಿಸಿದರು. ಯೋಜನೆಯ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ದಡಿಯಲ್ಲಿ ಸ್ವಸಹಾಯ ಸಂಘದ ಸದಸ್ಯರಿಗೆ ಹಣ್ಣಿನ ಗಿಡಗಳನ್ನು ವಿತರಿಸಿದರು.
ಅಂಬಲಪಾಡಿ ಗ್ರಾಪಂ ಸದಸ್ಯ ರಾಜೇಶ್ ಸುವರ್ಣ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಯೋಜನೆಯ ವತಿಯಿಂದ ಉಚಿತವಾಗಿ ನೀಡಲಾಗುವ ಆರೋಗ್ಯರಕ್ಷಾ ಕಾರ್ಡನ್ನು ವಿತರಿಸಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಶಿವಕುಮಾರ್ ಅಂಬಲಪಾಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಉಡುಪಿ ತಾಲೂಕಿನ ಯೋಜನಾಧಿಕಾರಿ ರೋಹಿತ್ ಹೆಚ್. ಸ್ವಾಗತಿಸಿದರೆ, ಅಂಬಾಗಿಲು ವಲಯ ಮೇಲ್ವಿಚಾರಕ ಜಯಕರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







