`ಅತಿವೃಷ್ಟಿ' ಜಿಲ್ಲೆಯ ಜನಪ್ರತಿನಿಧಿಗಳ ಜತೆ ಸಿಎಂ ಸಭೆ: 'ಪ್ರವಾಹ' ಬಾಕಿ ಪರಿಹಾರ ಬಿಡುಗಡೆಗೆ ಸೂಚನೆ

ಬೆಳಗಾವಿ, ಜು. 25: `ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ರವಿವಾರ ನಗರದ ಪ್ರವಾಸಿಮಂದಿರದಲ್ಲಿ ನಡೆದ ಅತಿವೃಷ್ಟಿ/ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, `ಒಂದು ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಪ್ರವಾಹ ನಿರ್ವಹಣೆ ಕುರಿತು ನಿಗಾ ವಹಿಸಲಾಗಿದೆ. ಎರಡು-ಮೂರು ದಿನಗಳಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಪರಿಸ್ಥಿತಿ ನಿರ್ವಹಣೆಗೆ ಸರಕಾರದಿಂದ ಎಲ್ಲ ಕ್ರಮ ಕೈಗೊಳ್ಳಲಾಗಿದೆ' ಎಂದು ತಿಳಿಸಿದರು.
ಪ್ರವಾಹ-ಬಾಕಿ ಪರಿಹಾರ ಬಿಡುಗಡೆಗೆ ಸೂಚನೆ: ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಳಿಗೆ ಯಡಿಯೂರಪ್ಪ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ 113 ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಜನರ ತುರ್ತು ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗಾಗಿ 89 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜನರ ಕಷ್ಟಗಳನ್ನು ಅರಿತುಕೊಂಡು ಜಿಲ್ಲಾಡಳಿತ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಪರಿಹಾರ ಕಾರ್ಯದಲ್ಲಿ ತೊಡಕು ಉಂಟಾದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ನಿರ್ದೇಶನ ನೀಡಿದರು.
ಅನುದಾನ ಹೆಚ್ಚಳಕ್ಕೆ ಮನವಿ: ಸಭೆಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, `ಪ್ರವಾಹ ಸಂದರ್ಭದಲ್ಲಿ ತುರ್ತು ಔಷಧಿ ಮತ್ತಿತರ ಸಾಮಗ್ರಿಗಳನ್ನು ಎನ್ಡಿಆರ್ಎಫ್ ಅನುದಾನದಲ್ಲಿ ಖರೀದಿಸಬೇಕು. ಎನ್ಡಿಆರ್ಎಫ್ ಹೊರತುಪಡಿಸಿ ಉಳಿದ ಹೆಚ್ಚಿನ ಅನುದಾನ ಅಗತ್ಯವಿದೆ ಎಂಬುದರ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು. ಎನ್ಡಿಆರ್ಎಫ್ ಅನುದಾನ ಹೆಚ್ಚಿಸುವಂತೆ ಕೋರಿ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲಾಗಿದೆ' ಎಂದು ತಿಳಿಸಿದರು.
ಜಾನುವಾರು ಹಾನಿ ಪರಿಹಾರ ವಿತರಣೆಗೆ ಸೂಚನೆ: ಪ್ರವಾಹ ಸಂದರ್ಭದಲ್ಲಿ ಕೊಚ್ಚಿ ಹೋಗಿರುವ ಜಾನುವಾರುಗಳ ಕುರಿತು ಸ್ಥಳೀಯವಾಗಿ ಮಾಹಿತಿ ಸಂಗ್ರಹಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು. ಆಲಮಟ್ಟಿ ಸದ್ಯಕ್ಕೆ 72 ಟಿಎಂಸಿ ಮಾತ್ರ ಸಂಗ್ರಹವಿದೆ. ಆದಾಗ್ಯೂ ಒಳಹರಿವು ಆಧರಿಸಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಜಲಾಶಯಗಳಲ್ಲಿ ಕನಿಷ್ಠ ಅಗತ್ಯತೆ ಕಾಯ್ದುಕೊಂಡು ಉಳಿದ ನೀರು ಬಿಡುಗಡೆ ಮಾಡಲಾಗುತ್ತಿದೆ.
`1,200 ಕೋಟಿ ರೂ.ಹಾನಿ' ತಕ್ಷಣವೇ 170 ಕೋಟಿ ರೂ.ಬಿಡುಗಡೆಗೆ ಮನವಿ: ಬೆಳಗಾವಿ ವಿಭಾಗದಲ್ಲಿ 1,400 ಕಿ.ಮೀ. ರಸ್ತೆ ಹಾನಿಯಾಗಿದೆ. 305 ಸೇತುವೆ ಹಾನಿ ಸೇರಿ ಒಟ್ಟಾರೆ 1,200 ಕೋಟಿ ರೂ.ಹಾನಿಯಾಗಿದ್ದು, ತಕ್ಷಣ ದುರಸ್ತಿಗೆ 170 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಇದೇ ವೇಳೆ ಮನವಿ ಮಾಡಿಕೊಂಡರು.
ಕಳೆದ ಬಾರಿ ಶಾಶ್ವತ ಪುನರ್ವಸತಿ ಕಲ್ಪಿಸಿ ವಿತರಿಸಲಾಗಿರುವ ಮನೆಗಳಿಗೆ ಇದುವರೆಗೆ ಖಾಲಿಯಿರುವ ಮನೆಗಳನ್ನು ಅಗತ್ಯತೆ ಆಧರಿಸಿ ಬೇರೆಯವರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಕೃಷ್ಣಾ ನದಿಯಲ್ಲಿ ಈಗಲೂ ನೀರಿನ ಹರಿವು ಜಾಸ್ತಿ ಇರುವುದರಿಂದ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜನರ ತುರ್ತು ರಕ್ಷಣೆಗೆ ಅಗತ್ಯವಾಗಿರುವ ಬೋಟ್ ಗಳನ್ನು ನದಿತೀರದ ಭಾಗಗಳ ಗ್ರಾಮಗಳಿಗೆ ಒದಗಿಸಬೇಕು. ಪ್ರವಾಹದಿಂದ ಹಾನಿಗೊಳಗಾಗಿರುವ ಮನೆಗಳ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಬೇಕು. ಕಳೆದ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಆದ್ಯತೆ ಮೇರೆಗೆ ಮೊದಲು ಪರಿಹಾರ ಒದಗಿಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಒತ್ತಾಯಿಸಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಕಳೆದ ಬಾರಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳು ಹಾಗೂ ಸೇತುವೆಗಳ ದುರಸ್ತಿಗೆ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ ಕನಿಷ್ಠ 1 ಕೋಟಿ ರೂ.ಅನುದಾನ ನೀಡಬೇಕಿತ್ತು.







